ಬೆಹ್ರಾಂಪುರ/ ಕೋಲ್ಕತ್ತ: ಪಶ್ಚಿಮ ಬಂಗಾಳದ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳೇ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಥಳಿಸಿದ ಘಟನೆಗಳಿಗೆ ಸಂಬಂಧಿಸಿದಂತೆ ಹಣಕಾಸು ಸಚಿವ ಪ್ರಣವ್ ಮುಖರ್ಜಿ, ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ರಾಜ್ಯ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.
`ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತ ಮಂಡಳಿಯ ನಡುವೆ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ, ಇದು ವಿದ್ಯಾರ್ಥಿಗಳೇ ಶಿಕ್ಷಕರನ್ನು ಥಳಿಸುವ ಮಟ್ಟಕ್ಕೆ ಹೋಗಬಾರದು. ಇದು ಸರಿಯಲ್ಲ, ಹಾಗೆಯೇ ಸಹಿಸಲೂ ಸಾಧ್ಯವಿಲ್ಲ~ ಎಂದು ಪ್ರಣವ್ ಅಭಿಪ್ರಾಯಪಟ್ಟಿದ್ದಾರೆ.
ಉತ್ತರ ದಿನಾಜ್ಪುರದ ರಾಯ್ಗಂಜ್ ಸರ್ಕಾರಿ ಕಾಲೇಜಿನಲ್ಲಿ ಕೆಲ ದಿನಗಳ ಹಿಂದೆ ವಿದ್ಯಾರ್ಥಿ ಸಂಘದ ಚುನಾವಣೆಗೆ ಸಂಬಂಧಿಸಿದಂತೆ ತೃಣಮೂಲ ಛಾತ್ರ ಪರಿಷತ್ (ಟಿಎಂಸಿಪಿ) ಬೆಂಬಲಿಗರು ಮತ್ತು ಕಾಲೇಜು ಪ್ರಾಂಶುಪಾಲರು, ಶಿಕ್ಷಕರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವಾಗ್ವಾದ ವಿಕೋಪಕ್ಕೆ ತಿರುಗಿ ವಿದ್ಯಾರ್ಥಿಗಳು ಶಿಕ್ಷಕರ ಮೇಲೆ ಕೈಮಾಡಿದ್ದರು. ಬಿರ್ಭಮ್ ಜಿಲ್ಲೆಯ ಕಾಲೇಜೊಂದರಲ್ಲಿ ತೃಣಮೂಲ ಕಾಂಗ್ರೆಸ್ ಬೆಂಬಲಿತ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಹೊಡೆದಿದ್ದರು.
ನಡಿಯಾ ಜಿಲ್ಲೆಯ ಮಜ್ದಿಯಾ ಕಾಲೇಜಿನಲ್ಲಿ ಸಹ ಸಿಪಿಎಂನ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರಾಂಶುಪಾಲರಿಗೆ ಥಳಿಸಿದ ಘಟನೆ ನಡೆದಿತ್ತು.