ಬೆಂಗಳೂರು: 2011 ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಸಿಐಡಿ ತನಿಖೆಯಲ್ಲಿ ದೃಢಪಟ್ಟಿರುವ ಕಾರಣ, ಮುಖ್ಯ ಪರೀಕ್ಷೆ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮತ್ತು ಮರು ಸಂದರ್ಶನಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಶುಕ್ರವಾರ ಇಲ್ಲಿ ನಡೆದ ಸಚಿವ ಸಂಪುಟದ ಸಭೆ ಈ ಸಂಬಂಧ ಕೆಪಿಎಸ್ಸಿಗೆ ಸೂಕ್ತ ಸೂಚನೆ ನೀಡಲು ತೀರ್ಮಾನಿಸಿದೆ. ಕೇಂದ್ರ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಪಿ.ಸಿ. ಹೋಟಾ ಅವರು ಇತ್ತೀಚೆಗೆ ನೀಡಿದ ವರದಿಯ ಆಧಾರದಲ್ಲಿಯೇ ಮರು ಮೌಲ್ಯಮಾಪನ ಮತ್ತು ಮರು ಸಂದರ್ಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಮುಖ್ಯ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕವನ್ನು ಗೌಪ್ಯವಾಗಿ ಇಡಲಾಗುವುದು. ಸಂದರ್ಶಕರಿಗೆ ಈ ಅಂಕ ತಿಳಿಯದಂತೆ ನೋಡಿಕೊಳ್ಳಲಾಗುವುದು ಎಂದರು. 362 ಪ್ರೊಬೇಷನರಿ ಗೆಜೆಟೆಡ್ ಎ ಮತ್ತು ಬಿ ಗ್ರೇಡ್ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಸಿಐಡಿ ತನಿಖೆ ನಡೆಸಲು ಆದೇಶಿಸಲಾಗಿತ್ತು.
ಲಂಚ ಸಾಬೀತು: ಉಪ ವಿಭಾಗಾಧಿಕಾರಿ ಮತ್ತು ಡಿವೈಎಎಸ್ಪಿ ಹುದ್ದೆಗೆ ದೊಡ್ಡ ಮೊತ್ತದ ಹಣದ ಬೇಡಿಕೆ ಇಡಲಾಗಿತ್ತು ಎಂಬ ಆರೋಪದಲ್ಲಿ ಸತ್ಯಾಂಶವಿದೆ ಎನ್ನುವುದು ಸಿಐಡಿ ತನಿಖೆಯಿಂದ ಸಾಬೀತಾಗಿದೆ. ಕೆಪಿಎಸ್ಸಿ ಹಗರಣ ದಲ್ಲಿ ಭಾಗಿಯಾಗಿರುವವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗುವುದು. ಅದರ ವಿಚಾರಣೆ ಅದರ ಪಾಡಿಗೆ ನಡೆಯುತ್ತದೆ ಎಂದು ತಿಳಿಸಿದರು.
ಸೈಕಲ್ ವಿತರಣೆ: ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಯಲ್ಲಿರುವ 8ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲು ಸಂಪುಟ ಒಪ್ಪಿಗೆ ನೀಡಿದೆ.
ಪ್ರೋತ್ಸಾಹ ಧನ: ಹಿಂದುಳಿದ ವರ್ಗ ಗಳ ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಸಿಗದೇ ಇರುವ ವಿದ್ಯಾರ್ಥಿಗಳಿಗೆ ತಿಂಗಳಿಗೆ ರೂ 1500ರಂತೆ 10 ತಿಂಗಳು ಪ್ರೋತ್ಸಾಹಧನ ನೀಡಲಾಗುವುದು.