ಮಲೆಮಹದೇಶ್ವರ ಬೆಟ್ಟ(ಕೊಳ್ಳೇಗಾಲ ತಾ.): ಅಡುಗೆ ಸಿಲಿಂಡರ್ ಅನಿಲ ಸೋರಿಕೆಯಿಂದ ಆಕಸ್ಮಿಕವಾಗಿ ಬೆಂಕಿ ಅನಾಹುತ ಸಂಭವಿಸಿ ಇಲ್ಲಿನ ಮಹದೇಶ್ವರಸ್ವಾಮಿ ದೇವಸ್ಥಾನದ ಅನತಿ ದೂರದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿದ್ದ 46 ಅಂಗಡಿಗಳು ಸುಟ್ಟುಹೋಗಿದ್ದು, ಸುಮಾರು 80 ಲಕ್ಷ ರೂಪಾಯಿ ನಷ್ಟವಾಗಿದೆ.
ಪ್ಲಾಸ್ಟಿಕ್, ಬಟ್ಟೆ, ಮಿಠಾಯಿ, ತಾಮ್ರ ಮತ್ತು ಹಿತ್ತಾಳೆ ಇತ್ಯಾದಿ ಅಂಗಡಿಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡಲಾಗುತ್ತಿತ್ತು. ಭಾನುವಾರ ರಾತ್ರಿ ಬೊಮ್ಮ ಎಂಬುವರ ಅಂಗಡಿಯಲ್ಲಿ ಅನಿಲ ಸೋರಿಕೆಯಾಗಿದೆ. ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆಯ ಎರಡು ಬದಿಯಲ್ಲಿದ್ದ ಎಲ್ಲ ಅಂಗಡಿಗಳು ಸುಟ್ಟುಹೋಗಿವೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಹನೂರಿನ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.