ಮಳವಳ್ಳಿ: ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಡಿ.22ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ತಾಲ್ಲೂಕಿನ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರು ಮತ್ತು ಮೈಸೂರಿನ 50 ಕ್ಕೂ ಹೆಚ್ಚು ಕಂಪೆನಿಗಳು ಇದರಲ್ಲಿ ಪಾಲ್ಗೊಳ್ಳಲಿವೆ. ತಾಲ್ಲೂಕಿನ ನಿರುದ್ಯೋಗಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಈಗಾಗಲೇ 500 ಕ್ಕೂ ಹೆಚ್ಚು ನಿರುದ್ಯೋಗಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ಸಿನರ್ಜಿ ಕೆರಿಯರ್ ನಿರ್ದೇಶಕ ರಾಘವ್ ಮಾತನಾಡಿ, ಮೇಳದಲ್ಲಿ 47 ಕಂಪೆನಿಗಳು ಭಾಗವಹಿಸಲಿದ್ದು ಒಟ್ಟು 6,700 ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಹತ್ತನೆ ತರಗತಿ ಉತ್ತೀರ್ಣ ಹಾಗೂ ಅನುತ್ತೀರ್ಣಗೊಂಡವರು, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಚಾಲನೆ ಪರವಾನಗಿಯುಳ್ಳವರು ಮೇಳದಲ್ಲಿ ಭಾಗವಹಿಸಬಹುದು ಎಂದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಸ್.ಪ್ರಕಾಶ್, ಮುಖಂಡರಾದ ಸುರೇಶ್, ಕಿರುಗಾವಲು ಮಹಾದೇವಪ್ಪ ಹಾಜರಿದ್ದರು.