ಬೆಂಗಳೂರು: `ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕ ಎಸ್.ಪಿ.ಮಹಾಂತೇಶ್ ಅವರ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಬೇಕು~ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಅಧಿಕಾರಿಗಳು ತಮ್ಮ ಜತೆಗಾರನ ಈ ದಾರುಣವಾದ ಸಾವನ್ನು ಪ್ರತಿಭಟಿಸಬೇಕು. ಗೃಹ ಮಂತ್ರಿ ಅವರು ಇದರ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು~ ಎಂದರು.
`ಈ ಕೊಲೆಯ ಹಿಂದೆ ರಾಜಕೀಯ ಷಡ್ಯಂತ್ರವಿದೆ. ಭೂ ಮಾಫಿಯಾದವರೆ ಈ ಕೆಲಸವನ್ನು ಮಾಡಿದ್ದು ಎಂಬುದು ಮೇಲ್ನೋಟಕ್ಕೆ ಅನುಮಾನ ಬರುತ್ತದೆ. ತಪ್ಪಿತಸ್ಥರು ಯಾರೇ ಇರಲಿ ಅವರನ್ನು ಆದಷ್ಟು ಬೇಗ ಬಂಧಿಸಿ ಕ್ರಮ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು.
`ಬಿಎಚ್ಇಎಲ್ ಬಡಾವಣೆಯ ರೆಮ್ಕ ನೌಕರರಿಗೆ ನೀಡಲಾದ 452 ನಿವೇಶನಗಳ ಖಾತೆ ರದ್ದು ಮಾಡಿರುವ ಬಿಬಿಎಂಪಿ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಆದರೆ, ಭೂ ಮಾಫಿಯಾದವರು ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ತೊಂದರೆ ನೀಡುತ್ತಿದ್ದಾರೆ. ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು~ ಎಂದು ಮನವಿ ಮಾಡಿದರು.
ನೆಮ್ಮದಿ ಕೇಂದ್ರ ನೌಕರರ ಪ್ರತಿಭಟನೆ: `ರಾಜ್ಯದಲ್ಲಿನ ನೆಮ್ಮದಿ ಕೇಂದ್ರಗಳಲ್ಲಿ 1600 ಜನ ಕೆಲಸಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ, ಈಗ ಗುತ್ತಿಗೆ ಮುಗಿದಿದೆ ಎಂದು ಕೆಲಸಗಾರರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ. ಈಗ ಈ 1600 ಜನ ಕೆಲಸಗಾರರು ಬೀದಿ ಪಾಲಾಗುತ್ತಿದ್ದಾರೆ~ ಎಂದು ನೆಮ್ಮದಿ ಕೇಂದ್ರದ ಅಧ್ಯಕ್ಷ ಮಹಮದ್ ಹಫೀಜ್ ಹೇಳಿದರು.
`ಈ ಕೆಲಸಗಾರರನ್ನು ಸದ್ಭಳಕೆ ಮಾಡಿಕೊಳ್ಳಬೇಕು ಮತ್ತು ಅವರ ಜೀವನಾಧಾರ ಕಲ್ಪಿಸಬೇಕೆಂದು ಒತ್ತಾಯಿಸಿ ಮಂಗಳವಾರ (ಮೇ 22) ರಂದು ಬನ್ನಪ್ಪ ಉದ್ಯಾನದ ಬಳಿ ಪ್ರತಿಭಟನೆ ಕೈಗೊಳ್ಳಲಾಗುವುದು~ ಎಂದರು. ಗೋಷ್ಠಿಯಲ್ಲಿ ಸಮತಾ ಸೈನಿಕ ದಳದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ಉನ್ನತ ತನಿಖೆಗೆ ಬಿಎಸ್ವೈ ಆಗ್ರಹ
ಬೆಂಗಳೂರು: `ಸಹಕಾರ ಸಂಘಗಳ ಇಲಾಖೆ ಉಪ ನಿರ್ದೇಶಕ ಎಸ್. ಪಿ.ಮಹಾಂತೇಶ ಅವರ ಹತ್ಯೆ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದು ಮೇಲ್ನೋಟಕ್ಕೆ ಅನಿಸುತ್ತಿದೆ. ಹೀಗಾಗಿ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಸಚಿವ ಆರ್.ಅಶೋಕ ಅವರನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಅವರು ಸಚಿವರಿಗೆ ಪತ್ರ ಬರೆದಿದ್ದಾರೆ. `ಹತ್ಯೆ ಹಿಂದೆ ಭೂ ಮಾಫಿಯಾ ಇದೆ ಎಂಬ ವರದಿ ಪತ್ರಿಕೆಗಳಲ್ಲಿ ಬಂದಿದೆ. ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಬೇಕು~ ಎಂದು ಅವರು ಆಗ್ರಹಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.