ಬೀದರ್: ಮಹಾನ್ ವ್ಯಕ್ತಿಗಳನ್ನು ಯಾವುದೇ ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಶಾಸಕ ರಹೀಮ ಖಾನ್ ಸಲಹೆ ಮಾಡಿದರು.
ಛತ್ರಪತಿ ಶಿವಾಜಿ ಮಹಾರಾಜ ಅವರ ಜಯಂತಿ ಪ್ರಯುಕ್ತ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಮಹೋತ್ಸವ ಸಮಿತಿಯು ನಗರದ ಜಿಲ್ಲಾ ರಂಗಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಾನ್ ವ್ಯಕ್ತಿಗಳು ಯಾವುದೇ ಸಮಾಜ ಅಥವಾ ಸಮುದಾಯಕ್ಕೆ ಸೀಮಿತ ಆಗಿರುವುದಿಲ್ಲ. ಅವರು ಒಟ್ಟು ಮಾನವ ಸಮಾಜದ ಒಳಿತಿಗಾಗಿ ಶ್ರಮಿಸಿರುತ್ತಾರೆ. ಅದಕ್ಕಾಗಿಯೇ ಅವರಿಗೆ ದೇವರ ಬೆಂಬಲ ಮತ್ತು ಮಾರ್ಗದರ್ಶನ ಸಿಕ್ಕಿರುತ್ತದೆ ಎಂದು ಹೇಳಿದರು.
ಶಾಸಕ ಬಂಡೆಪ್ಪ ಕಾಶೆಂಪೂರ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ, ನಗರಸಭೆ ಅಧ್ಯಕ್ಷೆ ಶ್ರೀದೇವಿ ಕರಂಜಿ, ಸದಸ್ಯ ರವಿ ಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಡಾ. ಶೈಲೇಂದ್ರ ಬೆಲ್ದಾಳೆ, ಪ್ರಭುಶೆಟ್ಟಿ ಮೆಂಗಾ, ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ್, ಮಹೋತ್ಸವ ಸಮಿತಿಯ ಅಧ್ಯಕ್ಷ ಉದಯಬಾನು ಹಲವಾಯಿ, ಅನೀಲಕುಮಾರ ಬೆಲ್ದಾರ್ ಮತ್ತಿತರರು ಉಪಸ್ಥಿತರಿದ್ದರು.