ಬೀದರ್: ಮಹಾಪುರುಷರ ಮೌಲ್ಯಗಳನ್ನು ಎಲ್ಲರೂ ಪಾಲಿಸುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರೇವುನಾಯಕ್ ಬೆಳಮಗಿ ತಿಳಿಸಿದರು.
ನಗರದ ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಜಗತ್ತಿಗೆ ಸಾಮರಸ್ಯ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳನ್ನು ಸಾರಿದ ಪುಣ್ಯಭೂಮಿ ನಮ್ಮದಾಗಿದೆ. ಹೀಗಾಗಿ ಚಾರಿತ್ರಿಕ ವ್ಯಕ್ತಿಗಳನ್ನು ಗೌರವಿಸುವುದು ಮತ್ತು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
ವಾಲ್ಮೀಕಿ ಸಾವಿರಾರು ವರ್ಷಗಳ ಹಿಂದೆ ರಾಮಾಯಣ ರಚಿಸಿದ್ದಾರೆ. ಶೂದ್ರನಾಗಿದ್ದರೂ ತಪಸ್ಸು ಹಾಗೂ ಧರ್ಮನಿಷ್ಠೆಯಿಂದ ಅವರಿಗೆ ರಾಮಾಯಣದಂಥ ಮಹಾಕಾವ್ಯ ಬರೆಯಲು ಸಾಧ್ಯವಾಯಿತು ಎಂದು ತಿಳಿಸಿದರು.
ಭಾರತೀಯ ಸಂಸ್ಕೃತಿಯ ಮೌಲ್ಯಗಳು ರಾಮಾಯಣದಲ್ಲಿ ಅಡಕವಾಗಿದೆ. ತಂದೆ ತಾಯಿಗಳಿಗೆ ಸಮಾಜದಲ್ಲಿನ ಸ್ಥಾನಮಾನ, ಸಹೋದರರಲ್ಲಿ ಪರಸ್ಪರ ಅರಿವು, ಸಹಬಾಳ್ವೆಯ ಅಗತ್ಯವನ್ನು ರಾಮಾಯಣದಲ್ಲಿ ಚಿತ್ರಿಸಿದ್ದಾರೆ ಎಂದರು.
ರಾಜ್ಯ ಸರ್ಕಾರ ಎಲ್ಲ ಸಮುದಾಯಗಳ ಏಳಿಗೆಗೆ ಕ್ರಮ ಕೈಗೊಂಡಿದೆ. ಸಮಾಜದಲ್ಲಿ ಶಾಂತಿ, ಸಾಮರಸ್ಯ ಹಾಗೂ ಸೌಹಾರ್ದತೆ ಕಾಪಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಕಿವಿಮಾತು ಹೇಳಿದರು.
ಶಾಸಕರಾದ ರಹೀಮ್ಖಾನ್, ಬಂಡೆಪ್ಪ ಕಾಶೆಂಪೂರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕುಶಾಲ ಪಾಟೀಲ್ ಗಾದಗಿ, ಜಿಲ್ಲಾಧಿಕಾರಿ ಸಮೀರ್ ಶುಕ್ಲಾ, ಜಿಲ್ಲಾ ಟೋಕರೆ ಕೋಳಿ ಸಮಾಜ ಸಂಘದ ಅಧ್ಯಕ್ಷ ಜಗನ್ನಾಥ ಜಮಾದಾರ ಮತ್ತಿತರರು ಉಪಸ್ಥಿತರಿದ್ದರು.
ಜಯಂತಿ ಅಂಗವಾಗಿ ಆಯೋಜಿಸಿದ್ದ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಗೆ ಸಚಿವ ರೇವುನಾಯಕ್ ಬೆಳಮಗಿ ಚಾಲನೆ ನೀಡಿದರು. ಮೆರವಣಿಗೆಯು ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಅಂಬೇಡ್ಕರ್ ವೃತ್ತ, ಜನರಲ್ ಕರಿಯಪ್ಪ ವೃತ್ತದ ಮೂಲಕ ಹಾಯ್ದು ಜಿಲ್ಲಾ ರಂಗಮಂದಿರದಲ್ಲಿ ಸಮಾರೋಪಗೊಂಡಿತು. ನ್ಯೂ ಭಗತ್ಸಿಂಗ್ ಯುವ ಕ್ರಾಂತಿಕಾರಿ ಯುವಕ ಸಂಘದಿಂದ ನಗರದಲ್ಲಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.