ಕೊಪ್ಪಳ: ಮಹಿಳೆ ಇಂದಿನ ದಿನಮಾನದಲ್ಲಿ ಎಲ್ಲ ಕ್ಷೇತ್ರದಲ್ಲಿ ಪುರುಷರಿಗೆ ಸಮಾನವಾಗಿ ದುಡಿಯುತ್ತಿದ್ದಾಳೆ. ಆದರೂ ಅವಳ ಮೇಲೆ ದೌರ್ಜನ್ಯ ನಿಂತಿಲ್ಲ. ಅವಳಿಗೆ ಸಿಗಬೇಕಾದ ಗೌರವ-ಸೌಲಭ್ಯ ಸಿಗುತ್ತಿಲ್ಲ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೀನಾ ಪ್ರಕಾಶ್ ವಿಷಾದಿಸಿದರು.ಅವರು ಮೋರ್ಚಾ ಆಶ್ರಯದಲ್ಲಿ ಇಲ್ಲಿಗೆ ಸಮೀಪದ ಭಾಗ್ಯನಗರದಲ್ಲಿ ಭಾಗ್ಯಮ್ಮ ಭೀಮಸೇನಪ್ಪ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯ ಮೇಲೆ ದೌರ್ಜನ್ಯ ತಡೆಗಟ್ಟಲು 1961ರಲ್ಲಿಯೇ ವರದಕ್ಷಿಣೆ ನಿಷೇಧ ಕಾನೂನು ತರಲಾಗಿದ್ದರೆ, 1994ರಲ್ಲಿ ಜಾರಿಗೆ ಬಂದ ಕಾನೂನಿನಂತೆ ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಸಮಪಾಲು ಸಿಗಲಿದೆ. ಈ ಕಾನೂನುಗಳನ್ನು ಬಳಸಿಕೊಳ್ಳಲು ಮಹಿಳೆಯರು ಹಿಂದೇಟು ಹಾಕಬಾರದು ಎಂದು ಅವರು ಕಿವಿಮಾತು ಹೇಳಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಈ ಯೋಜನೆಗಳ ಸದುಪಯೋಗವನ್ನು ಸಹ ಪಡೆಯಬೇಕು ಎಂದು ಅವರು ಹೇಳಿದರು.
ಮಹಿಳಾ ಮೋರ್ಚಾದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ಎಸ್.ಮುದಗಲ್ಲ ಅವರು ಮಾತನಾಡಿ, ಮೀಸಲಾತಿಯಿಂದಾಗಿ ಮಹಿಳೆಯರಿಗೆ ಸಹ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗುತ್ತಿದ್ದು ಇದನ್ನು ಬಳಸಿಕೊಂಡು ಸಮಾಜದ ಸೇವೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಾರಿಗೆ ತಂದಿರುವ ಭಾಗ್ಯಲಕ್ಷ್ಮಿ ಯೋಜನೆ ಹೆಮ್ಮೆ ತರುವಂಥದ್ದು. ಈ ಯೋಜನೆ ಕುರಿತಂತೆ ಗ್ರಾಮೀಣ ಭಾಗದ ಮಹಿಳೆಯರಿಗೆ ಮಾಹಿತಿ ನೀಡಿ, ಅದು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡಬೇಕು ಎಂದು ಅವರು ಕಾರ್ಯಕರ್ತೆಯರಿಗೆ ಸಲಹೆ ನೀಡಿದರು.
ನಂತರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಗಿರೇಗೌಡ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಗೌರಿ ಸಿಂಗಟಾಲೂರು, ಸುವರ್ಣ ಖಾನಾಪೂರ, ಯಲಬುರ್ಗಾ ತಾ.ಪಂ. ಅಧ್ಯಕ್ಷೆ ನೀಲಮ್ಮ, ಲಲಿತಾ ಅಗಡಿ, ಹೇಮಾವತಿ ಮಂಗಳೂರ, ಸುಜಾತಾ ಪಾಟೀಲ, ಸುಮಂಗಲಾ ಹಾಗೂ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.