ಭಟ್ಕಳ: `ಮಹಿಳೆಯರಲ್ಲಿ ಆರೋಗ್ಯದ ಕುರಿತು ಅರಿವು ಮತ್ತು ಜಾಗೃತಿ ಮೂಡಿದರೆ ಸಮುದಾಯದ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಲು ಸಾಧ್ಯ~ ಎಂದು ಜಿ.ಪಂ.ಸದಸ್ಯೆ ಜಯಶ್ರೀ ಮೊಗೇರ್ ಹೇಳಿದರು.
ತಾಲ್ಲೂಕಿನ ಶಿರಾಲಿಯ ಜನತಾ ವಿದ್ಯಾಲಯದ ಆವರಣದಲ್ಲಿ ಭಾರತ ಸರ್ಕಾರದ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ವಾರ್ತಾ ಇಲಾಖೆ ಕಾರವಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿರಾಲಿ ಗ್ರಾ.ಪಂ ಹಾಗೂ ಜನತಾ ವಿದ್ಯಾಲಯದ ಆಶ್ರಯದಲ್ಲಿ ಗುರುವಾರ ಜರುಗಿದ `ಜನನಿ ಸುರಕ್ಷಾ ಯೋಜನೆ ಹಾಗೂ ಲಸಿಕಾ ಕಾರ್ಯಕ್ರಮದ ಬಹು ಪ್ರಚಾರಾಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಜನರ ಆರೋಗ್ಯ ಸುಧಾರಣೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮಾನವೀಯತೆಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂಪಿ ಭಂಡಾರಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಕಾರ್ಯಕ್ರಮದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಜೆ. ಕಾಮತ್ ಮಾತನಾಡಿದರು. ಕ್ಷೇತ್ರ ಪ್ರಚಾರಾಧಿಕಾರಿ ಜಿ.ತುಕಾರಾಮ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ ಕಾಮತ್, ಶಿಶು ಅಭಿವೃದ್ಧಿ ಅಧಿಕಾರಿ ನಾಗಮ್ಮ ಆರ್. ನಾಯ್ಕ, ಮುಖ್ಯಶಿಕ್ಷಕ ಎ.ಬಿ. ನಾಯ್ಕ ಉಪಸ್ಥಿತರಿದ್ದರು. ನಂತರ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯದ ಕುರಿತು ಮಹಿಳೆಯರಿಗೆ ಏರ್ಪಡಿಸಿದ್ದ ರಸಪ್ರಶ್ನೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.