ಬಳ್ಳಾರಿ: ಮಹಿಳೆಯರು ಸ್ವತಃ ಸಾಕ್ಷರರಾಗುವುದರ ಜತೆಗೆ ಸರ್ಕಾರದ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಪ್ರಗತಿ ಪಥದತ್ತ ಮುನ್ನಡೆಯಬೇಕು ಎಂದು ಎಂದು ಶಾಸಕ ಬಿ. ಶ್ರೀರಾಮುಲು ಸಲಹೆ ನೀಡಿದರು.
ನಗರದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪರಿಶಿಷ್ಟ ಜಾತಿ/ ಪಂಗಡಗಳ ಸ್ವ-ಸಹಾಯ ಗುಂಪುಗಳಿಗೆ ಸುತ್ತುನಿಧಿ ಹಾಗೂ ಭಾಗ್ಯಲಕ್ಷ್ಮಿ ಫಲಾನುಭವಿಗಳಿಗೆ ಬಾಂಡ್ ವಿತರಿಸಿ ಅವರು ಮಾತನಾಡಿದರು.
400ಕ್ಕೂ ಅಧಿಕ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ತಲಾ ರೂ 10,000 ಸುತ್ತುನಿಧಿಯನ್ನು ಸಮಾಜ ಕಲ್ಯಾಣ ಇಲಾಖೆ ಮಂಜೂರು ಮಾಡಿದೆ. ಮಹಿಳೆಯರು ಈ ಸೌಲಭ್ಯಗಳ ಪ್ರಯೋಜನ ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಅವರು ಹೇಳಿದರು.
ಮಹಿಳೆಯರು ಸ್ವ-ಸಹಾಯ ಗುಂಪು, ಸ್ತ್ರೀಶಕ್ತಿ ಗುಂಪುಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಮಕ್ಕಳನ್ನು ಕೂಲಿಗೆ ಹಚ್ಚದೆ ಶಿಕ್ಷಣ ನೀಡಬೇಕು ಎಂದು ಸಂಸದೆ ಜೆ. ಶಾಂತಾ ಹೇಳಿದರು.
ಶಾಸಕ ಮೃತ್ಯುಂಜಯ ಜಿನಗಾ, ಜಿ.ಪಂ. ಅಧ್ಯಕ್ಷೆ ಅರುಣಾ ತಿಪ್ಪಾರೆಡ್ಡಿ, ಉಪ ಮೇಯರ್ ಶಶಿಕಲಾ ಮಾತನಾಡಿದರು. ಜಿ.ಪಂ. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಗೋನಾಳ್ ರಾಜಶೇಖರಗೌಡ, ತಾ.ಪಂ. ಅಧ್ಯಕ್ಷೆ ಉಮಾದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿ.ಎನ್. ಮೇಟಿ, ಪೋಲಯ್ಯ ಮತ್ತಿತರರು ಉಪಸ್ಥಿತರಿದ್ದರು. ರಾಜಪ್ಪ ಸ್ವಾಗತಿಸಿದರು. ಸೋಮಶೇಖರ್ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ 380 ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಲಾಯಿತು. ಶ್ರೀರಾಮುಲು ಅವರು ಮಹಿಳೆಯರಿಗೆ ಉಚಿತವಾಗಿ ಸೀರೆ, ಬಳೆ, ಕುಂಕುಮ ವಿತರಿಸಿದರು.