ಉಡುಪಿ: `ಮಾನವ ಹಕ್ಕುಗಳ ಉಲ್ಲಂಘನೆ ಇಂದು ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಕುರಿತು ಅರಿವು ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು' ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಹೇಳಿದರು.
ಜಿಲ್ಲಾಡಳಿತ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ ಮತ್ತು ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಾನವ ಹಕ್ಕುಗಳ ಸಂಘ ಏರ್ಪಡಿಸಿದ್ದ ಮಾನವ ಹಕ್ಕುಗಳ ಕುರಿತ ವಿಚಾರ ಸಂಕಿರಣವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ಹಕ್ಕುಗಳ ಅರಿವು ಮೂಡಿಸುವ ಕಾರ್ಯ ಮಾನವೀಯ ಕಾರ್ಯ, ಪ್ರಮುಖವಾಗಿ ಮಕ್ಕಳು, ಮಹಿಳೆಯರು ಮತ್ತು ದಲಿತರ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು. ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಕಾಶ ಕಣಿವೆ ಮತ್ತು ನ್ಯಾಯವಾದಿ ಶಿರ್ತಾಡಿ ವಿಲಿಯಂ ಪಿಂಟೊ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಪ್ರಾಂಶುಪಾಲ ಪ್ರೊ.ಜಿ. ಯೋಗಾನಂದ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಸುಜಾತ ವಿ.ಶೇಟ್ ಉಪಸ್ಥಿತರಿದ್ದರು.ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯಸಂಯೋಜನಾಧಿಕಾರಿ ಡಾ.ಗಣನಾಥ ಎಕ್ಕಾರು ಸ್ವಾಗತಿಸಿದರು. ಕನ್ನಡ ವಿಭಾಗದ ಸಂಯೋಜಕಿ ಡಾ.ನಿಕೇತನ ನಿರೂಪಿಸಿದರು. ಡಾ.ವೆಂಕಟೇಶ ಹೆಚ್.ಕೆ. ವಂದಿಸಿದರು.