ಶಿವಮೊಗ್ಗ: ಮಾಸಾಶನ ಬಿಡುಗಡೆ ಮಾಡುವಂತೆ ಸರ್ಕಾರ ವಿವಿಧ ಯೋಜನೆಗಳ ಫಲಾನುಭವಿಗಳು ಯುವ ಕಾಂಗ್ರೆಸ್ ಲೋಕಸಭಾ ಕ್ಷೇತ್ರ ಘಟಕದ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸರ್ಕಾರ ಇದುವರೆಗೂ ವಯೋವೃದ್ಧರ, ಅಂಗವಿಲಕರ ಹಾಗೂ ವಿಧವಾ ವೇತನವನ್ನು ಬಿಡುಗಡೆ ಮಾಡಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಮನೆಯಲ್ಲಿ ಮಕ್ಕಳೂ ಸರಿಯಾಗಿ ನೋಡುತ್ತಿಲ್ಲ. ಇದರಿಂದಾಗಿ ಒಂದು ಹೊತ್ತಿನ ಊಟಕ್ಕೆ ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಸಾಶನ ಬಿಡುಗಡೆಗೆ ಸಂಬಂಧಿಸಿದಂತೆ ಹಲವಾರು ಸರ್ಕಾರಿ ಕಚೇರಿಗಳಿಗೆ ತಿರುಗಿ, ಕೈಯಲ್ಲಿದ್ದ ಅಲ್ಪ-ಸ್ವಲ್ಪ ಹಣವನ್ನೂ ಕಳೆದುಕೊಂಡಿದ್ದೇವೆ. ಸರ್ಕಾರ ನಮ್ಮ ಕಷ್ಟಗಳನ್ನು ಅರಿತು ಅತಿ ಶೀಘ್ರ ಮಾಸಾಶನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಯುವ ಕಾಂಗ್ರೆಸ್ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಎಚ್.ಸಿ. ಯೋಗೀಶ್, ಪ್ರಧಾನ ಕಾರ್ಯದರ್ಶಿ ಮಹಮದ್ ಆರೀಫ್, ಶಿವಮೊಗ್ಗ ನಗರ ಕ್ಷೇತ್ರದ ಅಧ್ಯಕ್ಷ ಕೆ. ರಂಗನಾಥ್, ಶಿವಮೂರ್ತಿ, ಹನುಮಯ್ಯ, ರೇಷ್ಮಾ ಮತ್ತಿತರರು ವಹಿಸಿದ್ದರು.