ಬೆಂಗಳೂರು: `ಸರಗಳ್ಳತನ ಸೇರಿದಂತೆ ಯಾವುದೇ ಅಪರಾಧ ನಡೆದ ತಕ್ಷಣ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವ ಮೂಲಕ ಆರೋಪಿಗಳನ್ನು ಬಂಧಿಸಲು ಸಹಕಾರ ನೀಡಬೇಕೆಂದು~ ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
`ಸರ ದೋಚಿದ ನಂತರ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದರೆ ಎಲ್ಲ ಠಾಣೆಗಳಿಗೂ ಈ ಬಗ್ಗೆ ಸಂದೇಶ ರವಾನಿಸಿ ಸರಗಳ್ಳರ ಬಂಧನಕ್ಕೆ ತಕ್ಷಣ ಕ್ರಮ ಕೈಗೊಳ್ಳಬಹುದು.
ಆದರೆ ಬಹುತೇಕ ಪ್ರಕರಣಗಳಲ್ಲಿ ಸರ ಕಳೆದುಕೊಂಡ ಮಹಿಳೆಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡುತ್ತಿಲ್ಲ. ಆದ್ದರಿಂದ ದುಷ್ಕರ್ಮಿಗಳು ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ~ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಶನಿವಾರ ತಿಳಿಸಿದರು.
`ಯಾವುದೇ ಅಪರಾಧಗಳು ನಡೆಯಲಿ ತಕ್ಷಣ 100 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿ. ನಿಯಂತ್ರಣ ಕೊಠಡಿಗೆ ಸಂದೇಶ ಬಂದೊಡನೆ ಚೀತಾ, ಹೊಯ್ಸಳ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗುತ್ತದೆ. ಎಫ್ಐಆರ್ ದಾಖಲಿಸಲು ಸೂಚನೆ ನೀಡಲಾಗುತ್ತದೆ. ಸಿಬ್ಬಂದಿ ಪ್ರಕರಣ ದಾಖಲಿಸಿಕೊಳ್ಳದಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ~ ಎಂದು ತಿಳಿಸಿದರು.