ಬೀದರ್: ಚುನಾವಣೆಗಳು ಕಡಿಮೆ ಖರ್ಚಿನಲ್ಲಿ ನಡೆದರೆ ಮಾತ್ರ ಭ್ರಷ್ಟಾಚಾರ ತಡೆಗಟ್ಟಲು ಸಾಧ್ಯ. ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಪ್ರವೃತ್ತವಾಗಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಎಸ್. ಈಶ್ವರಪ್ಪ ಹೇಳಿದರು.ನಗರದಲ್ಲಿ ಮಂಗಳವಾರ ನಡೆದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ‘ನಮ್ಮ ಪಕ್ಷದಿಂದ ಕಡಿಮೆ ವೆಚ್ಚ ಮಾಡಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ’ ಎಂದು ಹೇಳಿದರು.
‘ಬರುವ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯಕರ್ತರು ಯಾವುದೇ ಆಸೆ- ಆಕಾಂಕ್ಷೆಗಳಿಲ್ಲದೇ ಕಾರ್ಯ ನಿರ್ವಹಿಸಬೇಕು. 150ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವಂತಾಗಬೇಕು. ಆಗ ಮಾತ್ರ ವಿರೋಧ ಪಕ್ಷಗಳಿಗೆ ಸೂಕ್ತ ಉತ್ತರ ನೀಡಿದಂತಾಗುತ್ತದೆ’ ಎಂದು ಅವರು ಹೇಳಿದರು.ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷದಲ್ಲೇ ಕೇಂದ್ರ ವಿವಿಧ ಇಲಾಖೆಗಳಿಂದ 16 ಪ್ರಶಸ್ತಿ ದೊರೆತಿವೆ. ಅಭಿವೃದ್ಧಿಯಲ್ಲಿ ರಾಜ್ಯ ಎರಡನೇ ಪಡೆದಿದೆ. ಬಿಜೆಪಿ ಆಡಳಿತ ಎಂಥದ್ದು ಎನ್ನುವುದನ್ನು ಸಾಬೀತುಪಡಿಸುತ್ತದೆ ಎಂದರು.
ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ 2 ಲಕ್ಷ 24 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಘುನಾಥರಾವ ಮಲ್ಕಾಪುರೆ, ಅಮರನಾಥ ಪಾಟೀಲ್, ಜಿಲ್ಲಾಧ್ಯಕ್ಷ ಸುಭಾಷ ಕಲ್ಲೂರ, ಶಾಸಕರಾದ ಬಸವರಾಜ ಪಾಟೀಲ್ ಅಟ್ಟೂರ, ಪ್ರಭು ಚವ್ಹಾಣ್, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಲಿಡ್ಕರ್ ಮಂಡಳಿ ಅಧ್ಯಕ್ಷ ರಾಜೇಂದ್ರ ವರ್ಮಾ ಮತ್ತಿತರರು ಉಪಸ್ಥಿತರಿದ್ದರು.