ವಿಜಾಪುರ: ಲೋಕಸಭಾಧ್ಯಕ್ಷೆ ಮೀರಾ ಕುಮಾರ್ ಸೇರಿದಂತೆ ಆರು ಜನರಿಗೆ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ನಾಲ್ಕನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಡಾ. ಮೀನಾ ಚಂದಾವರಕರ ತಿಳಿಸಿದರು.
ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಖ್ಯಾತ ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮಿ ದೇಶಮಾನೆ, ಐಎಎಸ್ ಅಧಿಕಾರಿ ಡಾ. ಶಾಲಿನಿ ರಜನೀಶ್, `ತರಂಗ' ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಪೈ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಘಟಿಕೋತ್ಸವ ಸಮಾರಂಭ ಮಾರ್ಚ್ 3ರಂದು ನಡೆಯಲಿದೆ. ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅಧ್ಯಕ್ಷತೆ ವಹಿಸಲಿದ್ದು, ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ ಘಟಿಕೋತ್ಸವ ಭಾಷಣ ಮಾಡುವರು ಎಂದು ಅವರು ತಿಳಿಸಿದರು.