ಸಿರಿಗೆರೆ: ಜಲ, ವನ ದೇಶದ ಸಂಪತ್ತು. ಅದನ್ನು ಸೂಕ್ತ ರೀತಿಯಲ್ಲಿ ಕಾಪಾಡಿದರೆ ಮುಂದಿನ ಪೀಳಿಗೆಗೆ ಅನುಕೂಲ ಆಗುತ್ತದೆ ಎಂದು ಚಿತ್ರದುರ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಮಾರಸ್ವಾಮಿ ಕರೆ ನೀಡಿದರು.
ಸಮೀಪದ ದೊಡ್ಡಾಲಘಟ್ಟ ಗ್ರಾಮದಲ್ಲಿ ಈಚೆಗೆ ಎಂ. ಬಸವಯ್ಯ ವಸತಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ `ವೃಕ್ಷಾರೋಪಣ~ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವನ ಸಂಪತ್ತು ನಾಶವಾಗಿ ಮಳೆ, ಬೆಳೆ ಕುಂಠಿತವಾಗಿ ಪ್ರತಿಕೂಲ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಪರಿಸರ ಕಾಪಾಡುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಪ್ರಾಂಶುಪಾಲ ಆರ್. ಕುಮಾರಸ್ವಾಮಿ ಮಾತನಾಡಿ, ಪ್ರತಿಯೊಬ್ಬರೂ ಗಿಡ ನೆಡುವ ಸಂಕಲ್ಪ ಮಾಡಬೇಕು ಎಂದರು.
ಪ್ರಾಂಶುಪಾಲರಾದ ಪ್ರೊ.ಟಿ. ನೀಲಾಂಬಿಕೆ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಜಿ.ಎ. ರವೀಂದ್ರನಾಥ್, ಎಸ್. ರವಿ, ಪ್ರೊ.ಬಿ.ಎಂ. ಮುರಿಗೇಶ್ವರಪ್ಪ, ಗ್ರಾಮ ಪಂಚಾಯ್ತಿ ಸದಸ್ಯ ವಿ.ಎಸ್. ನಾಗರಾಜ್, ಧರ್ಮದರ್ಶಿ ಜಿ.ಬಿ. ಗಿರಿಯಪ್ಪ ಉಪಸ್ಥಿತರಿದ್ದರು.