ಮಡಿಕೇರಿ: 81ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯು ಬುಧವಾರ ಇಲ್ಲಿ ಸಭೆ ಸೇರಿ, ಹಾವೇರಿಯಲ್ಲಿ ಮುಂದಿನ ಸಮ್ಮೇಳನ ನಡೆಸಲು ನಿರ್ಧರಿಸಿತು.
ಇದಕ್ಕೂ ಮೊದಲು ಹಾಸನ, ಚಾಮರಾಜನಗರ, ಗುಲ್ಬರ್ಗ ಹಾಗೂ ಬಳ್ಳಾರಿಯಲ್ಲಿ ಸಮ್ಮೇಳನ ನಡೆಸುವ ಕುರಿತು ಚರ್ಚಿಸಲಾಯಿತು. ಆದರೆ, ಕಾರ್ಯಕಾರಿ ಸಮಿತಿಯ ಅನೇಕ ಪದಾಧಿಕಾರಿಗಳು ಹಾವೇರಿಗೆ ಒಲವು ವ್ಯಕ್ತಪಡಿಸಿದರು. ಅಂತಿಮವಾಗಿ ಹಾವೇರಿಯಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.
ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ‘ಸಮ್ಮೇಳನವನ್ನು ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ಇಲ್ಲವೆ 2015ರ ಜನವರಿಯಲ್ಲಿ ಆಯೋಜಿಸಲಾಗುತ್ತದೆ. ಈ ಕುರಿತು ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗುತ್ತದೆ’ ಎಂದು ಹಾವೇರಿ ಜಿಲ್ಲಾ ಕಸಾಪ ಅಧ್ಯಕ್ಷ ಗುರುಶಾಂತಪ್ಪ ಮಾಸಣಗಿ ‘ಪ್ರಜಾವಾಣಿ’ಗೆ ತಿಳಿಸಿದರು.