ಲಾಹೋರ್ (ಪಿಟಿಐ): ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶರು ರಜೆಯಲ್ಲಿ ತೆರಳಿರುವ ಕಾರಣ ಮುಂಬೈ ದಾಳಿ ಪ್ರಕರಣದ ಪ್ರಮುಖ ರೂವಾರಿ ಝಕೀವುರ್ ರೆಹಮಾನ್ ಲಖ್ವಿ ಸೇರಿದಂತೆ ಏಳು ಮಂದಿ ಆರೋಪಿಗಳ ವಿಚಾರಣೆಯನ್ನು ನ್ಯಾಯಾಲಯವು ಜೂನ್ 10ರವರೆಗೂ ಮುಂದೂಡಿದೆ.
‘ಮುಂಬೈ ದಾಳಿ ಪ್ರಕರಣದ ವಿಚಾರಣೆ ನಡೆಸಬೇಕಿದ್ದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶರು ರಜೆಯಲ್ಲಿರುವ
ಕಾರಣ ಪ್ರಕರಣದ ವಿಚಾರಣೆ ಬುಧವಾರ ನಡೆಸಲಾಗುವುದಿಲ್ಲ’ ಎಂದು ನ್ಯಾಯಾಲಯದ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದರು.
ಕಳೆದ ಏಪ್ರಿಲ್ 10ರಂದು ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಲಖ್ವಿ ಕಳೆದ ಆರು ವಿಚಾರಣೆಗಳಿಗೂ ಹಾಜರಾಗಿಲ್ಲ. ಇತರ ಆರೂ ಮಂದಿ ಆರೋಪಿಗಳು ರಾವಲ್ಪಿಂಡಿಯ ಅಡಿಲಾ ಜೈಲಿನಲ್ಲಿ ವಿಚಾರಣೆಗೆ ಹಾಜರಾಗುತ್ತಿದ್ದರೂ ಲಖ್ವಿ ಗೈರು ಹಾಜರಾಗುತ್ತಿರುವುದು ಕಾನೂನಿನ ಉಲ್ಲಂಘನೆ ಎಂದು ಹೇಳಿದರು.
ಲಖ್ವಿ ಕಳೆದ ಬಾರಿ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ, ತನಗೆ ವಿದೇಶದಿಂದ ಮತ್ತು ತಾಲಿಬಾನ್ ಉಗ್ರರಿಂದ ಜೀವ ಬೆದರಿಕೆ ಇರುವ ಕಾರಣ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಕೋರಿದ್ದ. ಆದರೆ ಮನವಿಗೆ ನ್ಯಾಯಾಲಯ ಪ್ರತಿಕ್ರಿಯಿಸಿಲ್ಲ. ಅಲ್ಲಿಯವರೆಗೂ ಲಖ್ವಿ ಖುದ್ದಾಗಿ ಹಾಜರಾಗಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.