ಹಾವೇರಿ: ಎಸ್ಸಿ, ಎಸ್ಟಿ ಜನಾಂಗದವರಿಗೆ ನೀಡಿದಂತೆ ದೇಶದ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಮೀಸಲಾತಿ ನೀಡಲು ಶಿಫಾರಸು ಮಾಡಿರುವ ರಂಗನಾಥ ಮಿಶ್ರಾ ಹಾಗೂ ಸಾಚಾರ್ ವರದಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಜಿಲ್ಲಾ ಮುಸ್ಲಿಮ್ ಮೀಸಲಾತಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಗರದ ಮೆಹಬೂಬ್ ಸುಭ್ಹಾನಿ ದರ್ಗಾದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ಮಾರ್ಗದುದ್ದಕ್ಕೂ ಮಿಶ್ರಾ, ಸಾಚಾರ್ ವರದಿ ಜಾರಿಗೆ ತರಬೇಕೆಂಬ ಘೋಷಣೆ ಕೂಗಿದರು.
ಶೇ 13ರಷ್ಟಿರುವ ಮುಸ್ಲಿಮ್ ಸಮುದಾಯಕ್ಕೆ ಈವರೆಗೆ ದೊರೆಯಬೇಕಾದ ಸೌಲಭ್ಯಗಳು ದೊರೆತಿಲ್ಲ. ಇದರಿಂದ ಇಡೀ ಸಮುದಾಯ ಆರ್ಥಿಕ, ಶೈಕ್ಷಣಿಕ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಹಿಂದುಳಿದಿದೆ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಸಚಿವ ಜಬ್ಬಾರಖಾನ್ ಹೊನ್ನಳ್ಳಿ ಹೇಳಿದರು.
ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ, ಮುಸ್ಲಿಮ್ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ನಜೀರಸಾಬ್ ಸವಣೂರ ಮಾತನಾಡಿದರು.