ಬೆಂಗಳೂರು: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ರೂ 5 ಕೋಟಿ ನಗದು, ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಖಾತೆಗೆ ವರ್ಗಾವಣೆ ಆಗಿರುವ ಪ್ರಕರಣ ಕುರಿತು ಸಿಐಡಿ ತನಿಖೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಮಂಗಳವಾರ ವಿಧಾನಸಭೆಗೆ ತಿಳಿಸಿದರು.
ಜೆಡಿಎಸ್ನ ಎನ್.ಚೆಲುವರಾಯಸ್ವಾಮಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, `ಮೂಡಾ ಹಣ ಹೇಗೆ ಕಾಂಗ್ರೆಸ್ ಕಾರ್ಯಕರ್ತನ ಬ್ಯಾಂಕ್ ಖಾತೆಗೆ ವರ್ಗಾವಣೆ ಆಯಿತು? ಇದರಲ್ಲಿ ಯಾರ್ಯಾರು ಶಾಮೀಲಾಗಿದ್ದಾರೆ ಎಂಬುದರ ಸಮಗ್ರ ತನಿಖೆ ನಡೆಸಬೇಕು' ಎಂದು ಒತ್ತಾಯಿಸಿದರು.
ಅಲಹಾಬಾದ್ ಬ್ಯಾಂಕ್ನಲ್ಲಿದ್ದ ಐದು ಕೋಟಿ ಕೆ.ಆನಂದ ಎಂಬುವರ ಇಂಡಿಯನ್ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಲಾಗಿದೆ. ಆದರೆ, ಸತ್ಯ ಏನು ಏನ್ನುವುದು ಇನ್ನೂ ಗೊತ್ತಾಗಿಲ್ಲ ಎಂದು ಚೆಲುವರಾಯಸ್ವಾಮಿ ಹೇಳಿದರು.
ಇಡೀ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸೊರಕೆ ವಿವರಿಸಿದರು.