ಬೆಂಗಳೂರು: ಕರ್ನಾಟಕ ಜನತಾ ಪಕ್ಷದ (ಕೆಜೆಪಿ) 31 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶನಿವಾರ ಬಿಡುಗಡೆ ಮಾಡಿದರು.
ವಿಧಾನಪರಿಷತ್ ಮಾಜಿ ಸದಸ್ಯೆ ಸುನಂದಾ ಲಿಂಗನಗೌಡ ಪಾಟೀಲ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗ ಎಂ.ಸಿ.ಮಂಜುನಾಥ ಅರಸು, ಚಲನಚಿತ್ರ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ , ಎಂ.ಎಚ್.ಕೃಷ್ಣಮೂರ್ತಿ ಟಿಕೆಟ್ ಪಡೆದವರಲ್ಲಿ ಪ್ರಮುಖರಾಗಿದ್ದಾರೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುನಿತಾ ಮಲ್ಲಿಕಾರ್ಜುನ ಅವರ ಬದಲಿಗೆ, ಮಾಜಿ ಶಾಸಕ ಎ.ವಿ. ಉಮಾಪತಿ ಅವರಿಗೆ ಟಿಕೆಟ್ ನೀಡಲಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ಮೂವರು ರೈತ ನಾಯಕರಿಗೆ ಕೆಜೆಪಿ ಬೆಂಬಲ ಘೋಷಿಸಿದೆ.
ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಪುಟ್ಟಣ್ಣಯ್ಯ, ಹಾಸನದಿಂದ ಕೋಡಿಹಳ್ಳಿ ಚಂದ್ರಶೇಖರ, ಶ್ರೀರಂಗಪಟ್ಟಣದಿಂದ ನಂಜಂಡೇಗೌಡರ ಅವರು ಸ್ಪರ್ಧಿಸುತ್ತಿದ್ದಾರೆ. ಈ ಮೂವರು ರೈತ ನಾಯಕರಿಗೆ ಪಕ್ಷ ಸಂಪೂರ್ಣ ಬೆಂಬಲ ನೀಡಲಿದ್ದು, ಇವರ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಿಲ್ಲ' ಎಂದು ಸ್ಪಷ್ಟಪಡಿಸಿದರು.