ಮೈಸೂರು: ದಿ. ನಾಲ್ವಡಿ ಕೃಷ್ಣರಾಜ ಒಡೆಯರ್ (ಮರಣೋತ್ತರ), ಅಂತರರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ರಾಜೀವ್ ತಾರಾನಾಥ್, ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಐದು ಮಂದಿಗೆ ಮೈಸೂರು ವಿಶ್ವವಿದ್ಯಾನಿಲಯ ಏ.10ರಂದು ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಿದೆ.
‘ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸುವವರಲ್ಲಿ ಬೆಂಗಳೂರು ನಾರಾಯಣ ಹೃದಯಾಲಯದ ವ್ಯವಸ್ಥಾಪಕ ನಿರ್ದೇಶಕ ಡಾ.ದೇವಿಪ್ರಸಾದ್ ಶೆಟ್ಟಿ ಮತ್ತು ಬೆಂಗಳೂರಿನ ಪಿಇಎಸ್ ಸಂಸ್ಥೆಯ ಅಧ್ಯಕ್ಷ ಪ್ರೊ. ಎಂ.ಆರ್.ದೊರೆಸ್ವಾಮಿ ಸೇರಿದ್ದಾರೆ’ ಎಂದು ಮೈಸೂರು ವಿ.ವಿ ಕುಲಪತಿ ಪ್ರೊ. ವಿ.ಜಿ.ತಳವಾರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.‘ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಏ.10ರಂದು ಸಂಜೆ 4 ಗಂಟೆಗೆ ನಡೆಯಲಿರುವ 91ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಹಾಗೂ ಮೈಸೂರು ವಿವಿಯ ಕುಲಾಧಿಪತಿ ಹಂಸರಾಜ್ ಭಾರದ್ವಾಜ್ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ’ ಎಂದರು.
‘ರಾಜೀವ್ ತಾರಾನಾಥ್ ಅವರು ಅಮೆರಿಕದಲ್ಲಿರುವ ನಿಮಿತ್ತ ಅವರು ಮೈಸೂರಿಗೆ ಬಂದ ಮೇಲೆ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಲಿದ್ದಾರೆ. ದಿ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪದವಿಯನ್ನು ಮುಂದೆ ನಿಗದಿ ಪಡಿಸಲಾಗುವ ದಿನಾಂಕದಂದು ಅವರ ಮೊಮ್ಮಗ ಬೆಂಗಳೂರಿನ ರಾಜಭವನದಲ್ಲಿ ಸ್ವೀಕರಿಸಲಿದ್ದಾರೆ’ ಎಂದು ಅವರು ತಿಳಿಸಿದರು.