ಬೆಂಗಳೂರು: ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಗೈರುಹಾಜರಾಗಿರುವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಮಂಗಳವಾರದ ವೇಳೆಗೆ ಎಲ್ಲರೂ ಕರ್ತವ್ಯಕ್ಕೆ ಹಾಜರಾಗಬೇಕು. ಇಲ್ಲದಿದ್ದರೆ ಅಂತಹವರನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕ ಡಿ.ವೆಂಕಟೇಶಯ್ಯ ಎಚ್ಚರಿಕೆ ನೀಡಿದ್ದಾರೆ.
ಸೋಮವಾರದಿಂದ (ಏ.15) ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದೆ. ಕಡ್ಡಾಯವಾಗಿ ಮೌಲ್ಯಮಾಪನಕ್ಕೆ ಹಾಜರಾಗಬೇಕು ಎಂದು ತಿಳಿಸಿದ್ದರೂ, ಮೊದಲ ದಿನ ಶೇ 15ರಷ್ಟು ಶಿಕ್ಷಕರು ಗೈರು ಹಾಜರಾಗಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.
ಮಂಡಳಿಯ ಕಾಯ್ದೆ 1966ರ ಸೆಕ್ಷನ್ 27ರ ಅನ್ವಯ ಶಿಕ್ಷಕರು ಮಂಗಳವಾರ ಮೌಲ್ಯಮಾಪನಕ್ಕೆ ಹಾಜರಾಗಬೇಕು. ತಪ್ಪಿದ್ದಲ್ಲಿ ನೋಟಿಸ್ ಜಾರಿ ಮಾಡಿ, ಅಮಾನತುಗೊಳಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಎಚ್ಚರಿಸಿದ್ದಾರೆ.