ಬೇಲೂರು/ಹಾಸನ: ರೈತರ ತೀವ್ರ ವಿರೋಧದ ನಡುವೆಯೂ ಶನಿವಾರ ಬೇಲೂರಿನ ಯಗಚಿ ಜಲಾಶಯದಿಂದ 3 ಸಾವಿರ ಕ್ಯೂಸೆಕ್ಗೂ ಹೆಚ್ಚಿನ ನೀರನ್ನು ನದಿಗೆ ಹರಿಸಲಾಯಿತು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ರೈತರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಅಣೆಕಟ್ಟೆಗೆ ಮುತ್ತಿಗೆ ಹಾಕಲು ಮುಂದಾದರು. ಪ್ರವೇಶ ದ್ವಾರಕ್ಕೆ ಹಾಕಿದ್ದ ಬೀಗ ಮುರಿದು ಒಳನುಗ್ಗಲು ಯತ್ನಿಸಿದ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ನೀರು ಬಿಡುಗಡೆ ಸ್ಥಗಿತಗೊಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ಅಣೆಕಟ್ಟೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪುಟ್ಟೇಗೌಡ `ಹಿರಿಯ ಅಧಿಕಾರಿಗಳ ಆದೇಶದಂತೆ ನೀರು ಬಿಡಲಾಗುತ್ತಿದೆ. ಅವರ ಆದೇಶ ಬರದೆ ನೀರು ನಿಲ್ಲಿಸಲು ಸಾಧ್ಯವಿಲ್ಲ~ ಎಂದು ಹೇಳಿದರು.
ಈ ಹೇಳಿಕೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಯಿತು. ರೈತರು ಎಂಜಿನಿಯರ್ಗೆ ದಿಗ್ಬಂಧನ ಹಾಕಲು ಮುಂದಾದರು. ಪೊಲೀಸರು ಪುಟ್ಟೇಗೌಡ ಅವರನ್ನು ಸುರಕ್ಷಿತವಾಗಿ ಕರೆದೊಯ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಅಣೆಕಟ್ಟೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮೂರು ದಿನ ಬಂದ್ ಕರೆ: ಯಗಚಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ ಎಂದು ಪ್ರತಿಭಟಿಸಿ ಸೋಮವಾರದ ವರೆಗೆ ಸತತ ಮೂರು ದಿನ ಕಾಲ ಬೇಲೂರು ಬಂದ್ ನಡೆಯಲಿದೆ.