ಯಲಹಂಕ: ಅಂತರರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ನೀಡುವುದರ ಜತೆಗೆ ಅಂತರರಾಷ್ಟ್ರೀಯ ವಿಮಾನನಿಲ್ದಾಣ ಪ್ರಾಧಿಕಾರದ ಹುದ್ದೆಗಳಲ್ಲಿ ಶೇ.90ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಬ್ಯಾಟರಾಯನಪುರ ಕ್ಷೇತ್ರಘಟಕದ ವತಿಯಿಂದ ಅಂತರರಾಷ್ಟ್ರೀಯ ವಿಮಾನನಿಲ್ದಾಣ ರಸ್ತೆಯ ವಿದ್ಯಾನಗರ ಕ್ರಾಸ್ ಬಳಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡುವುದರ ಜೊತೆಗೆ ಹೊರರಾಜ್ಯ ಹಾಗೂ ದೇಶಗಳಿಂದ ವಿಮಾನ ನಿಲ್ದಾಣಕ್ಕೆ ಆಗಮಿಸುವ ಜನರಿಗೆ ಕೆಂಪೇಗೌಡರ ಬಗ್ಗೆ ತಿಳಿಸಲು, ನಿಲ್ದಾಣದೊಳಗೆ ಅವರ ಇತಿಹಾಸ ಸಾರುವ ನಾಮಫಲಕಗಳನ್ನು ಹಾಕಬೇಕು ಎಂದು ಸಲಹೆ ನೀಡಿದರು.