ನವದೆಹಲಿ (ಪಿಟಿಐ): ವಿಶಿಷ್ಟ ಗುರುತು ಸಂಖ್ಯೆ (ಯುಐಡಿ) ನೀಡಿಕೆ ಯೋಜನೆಗೆ ಸಂಬಂಧಿಸಿದಂತೆ ಯೋಜನಾ ಆಯೋಗ ಮತ್ತು ಗೃಹ ಸಚಿವಾಲಯದ ನಡುವೆ ತಲೆದೋರಿರುವ ಭಿನ್ನಾಭಿಪ್ರಾಯ ಪರಿಹರಿಸುವ ನಿಟ್ಟಿನಲ್ಲಿ, ಪ್ರಧಾನಿ ಮನಮೋಹನ್ ಸಿಂಗ್ ಬುಧವಾರ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳೊಂದಿಗೆ ಮಾತುಕತೆ ನಡೆಸಿದರು.
`ಯೋಜನೆ ಕುರಿತು ಒಮ್ಮತಕ್ಕೆ ಬರಲಾಗಿದೆ. ಭಿನ್ನಾಭಿಪ್ರಾಯಗಳ ಪರಿಶೀಲನೆ ನಡೆಸಲಾಗಿದೆ. ಯೋಜನೆಯ ವಿಸ್ತರಣೆಗೆ ಸಂಬಂಧಿಸಿದ ವಿಷಯ ಚರ್ಚಿಸಲು ಪ್ರಧಾನಿ ಶುಕ್ರವಾರ ಕರೆದಿರುವ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರೆಯುವ ಭರವಸೆ ಹೊಂದಿದ್ದೇವೆ. ಇದೇ ವೇಳೆ ಗೃಹ ಸಚಿವಾಲಯದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಯೋಜನೆಯನ್ನು ಡಿಜಿಟಲ್ ರೂಪಕ್ಕಿಳಿಸುವ ಪ್ರಸ್ತಾವವೂ ಚರ್ಚೆಗೆ ಬರಲಿದೆ~ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯ ಅವರು ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಹಣಕಾಸು ಸಚಿವ ಪ್ರಣವ್ ಮುಖರ್ಜಿ, ಗೃಹ ಸಚಿವ ಪಿ.ಚಿದಂಬರಂ, ಭಾರತೀಯ ವಿಶಿಷ್ಟ ಗುರುತು ಸಂಖ್ಯೆ ಪ್ರಾಧಿಕಾರದ ಅಧ್ಯಕ್ಷ ನಂದನ್ ನೀಲೇಕಣಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್ ಸಭೆಯಲ್ಲಿ ಭಾಗವಹಿಸಿದ್ದರು.