ಕೊಪ್ಪಳ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನ ಸಾಮಾನ್ಯರು ಜೀವನ ನಡೆಸದಂತಹ ಪರಿಸ್ಥಿತಿ ನಿರ್ಮಿಸಿದೆ ಎಂದು ಧಾರವಾಡ ಉತ್ತರ ಲೋಕಸಭಾ ಕೆೀತ್ರದ ಸದಸ್ಯ ಪ್ರಹ್ಲಾದ ಜೋಶಿ ದೂರಿದರು.
ಅವರು ನಗರದಲ್ಲಿ ಮಂಗಳವಾರ ಬಿಜೆಪಿ ಚುನಾವಣೆ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಧ್ಯಮ ಹಾಗೂ ಬಡವರು ಬದುಕಲು ಸಾಧ್ಯವಿಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಯುಪಿಎ ಸರ್ಕಾರದ ನೀತಿಗಳೇ ಕಾರಣ. ವರ್ಷಕ್ಕೆ ನಾಲ್ಕು ಸಲ ಮಾತ್ರ ಸಬ್ಸಿಡಿಯಡಿ ನೀಡುವ ಅಡುಗೆ ಅನಿಲ ಸಿಲಿಂಡರ್ಗಳ ವಿತರಣೆ ಮಾಡಲು ತೀರ್ಮಾನಿಸಿರುವ ಕೇಂದ್ರ ಸರ್ಕಾರ ಬರುವ ದಿನಗಳಲ್ಲಿ ಸಿಲಿಂಡರ್ಗಳ ಪೂರೈಕೆಯನ್ನೇ ಸ್ಥಗಿತಗೊಳಿಸಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಗ್ರಾಮೀಣ ಭಾಗಗಳಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅನುದಾನದಡಿ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಕೇಂದ್ರವು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ 8ನೇ ಹಂತದವರೆಗೆ ಅನುದಾನ ಬಿಡುಗಡೆಗೊಳಿಸಿದೆ. ಆದರೆ 9ನೇ ಹಂತದಲ್ಲಿ 1,499 ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆಯನ್ನು ಸಲ್ಲಿಸಿದ್ದರೂ ಅನುದಾನ ಬಿಡುಗಡೆಗೊಳಿಸಿಲ್ಲ. ಇದರಿಂದ ಗ್ರಾಮೀಣ ಪ್ರದೇಶದ ರಸ್ತೆ ನಿರ್ಮಾಣ ಕಾರ್ಯಕ್ಕೆ ತೊಂದರೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೇ ಈ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಸಹಕಾರಿಯಾಗಲಿವೆ ಎಂದು ವಿಶ್ವಾಸ ವ್ಯಕ್ತಡಿಸಿದರು. ಸಚಿವರಾದ ವಿ.ಸೋಮಣ್ಣ, ವಿಶ್ವೇಶ್ವರ ಹೆಗ್ಗಡೆ ಕಾಗೇರಿ, ಬಿಜೆಪಿ ವಕ್ತಾರ ಹಾಲೇಶ ಕಂದಾರಿ ಸುದ್ದಿಗೋಷ್ಠಿಯಲ್ಲಿ ಇದ್ದರು.