ಬೆಂಗಳೂರು: ಇದೇ 28, 29ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಯುವ ಕಾಂಗ್ರೆಸ್ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತಿಳಿಸಿದರು.
ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಅವರ ಭೇಟಿಯ ವೇಳಾಪಟ್ಟಿ ಗಮನಿಸಿ, ಬರಪೀಡಿತ ಪ್ರದೇಶಗಳ ಪರಿಶೀಲನೆಗೆ ಕರೆದೊಯ್ಯಲಾಗುವುದು~ ಎಂದು ಹೇಳಿದರು.
ಪ್ರದೇಶ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಪಟ್ಟಿ ವಿಸ್ತರಣೆಯಿಂದ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ, ಚುನಾವಣಾ ಸಿದ್ಧತೆಗೆ ಹೆಚ್ಚು ಜನರನ್ನು ತೊಡಗಿಸಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಸಿದ್ದರಾಮಯ್ಯ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ದಾವಣಗೆರೆಯಲ್ಲಿ ನಡೆದ ಕುರುಬರ ಸಮಾವೇಶದಲ್ಲಿ ಬಿಂಬಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, `ಕುರುಬ ಸಮುದಾಯಕ್ಕೆ ಸೇರಿದ ಕಾರ್ಯಕ್ರಮದಲ್ಲಿ ಹಾಗೆ ಬಿಂಬಿಸುವುದು ತಪ್ಪಲ್ಲ. ಆದರೆ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ~ ಎಂದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ವಿದೇಶಕ್ಕೆ ತೆರಳಿರುವ ಕುರಿತು ಕೇಳಿದ ಪ್ರಶ್ನೆಗೆ, `ಈಶ್ವರಪ್ಪ ಅವರ ಖಾಸಗಿ ಪ್ರವಾಸ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡಲಾರೆ~ ಎಂದು ಉತ್ತರಿಸಿದರು.