ಬನಹಟ್ಟಿ: ರಕ್ತದಾನದಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ವ್ಯಕ್ತಿ ಹೊಸತನವನ್ನು ಪಡೆದುಕೊಳ್ಳುತ್ತಾನೆ ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಿದ್ದು ಸವದಿ ತಿಳಿಸಿದರು.
ಅವರು ಸಮೀಪದ ಕುಲ್ಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಜನರಿಗೆ ರಕ್ತದಾನದ ಮಹತ್ವವನ್ನು ತಿಳಿ ಹೇಳಬೇಕು. ಗ್ರಾಮೀಣ ಭಾಗದ ಜನರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿ ಸಮಾಜ ಸೇವೆಗೆ ಮುಂದಾಗಬೇಕು ಎಂದು ಸವದಿ ತಿಳಿಸಿದರು.
ಈ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಗ್ರಾಮಸ್ಥರು ರಕ್ತದಾನ ಮಾಡಿದರು. ಕುಲ್ಹಳ್ಳಿ ಗ್ರಾ.ಪಂ. ಅಧ್ಯಕ್ಷ ಸಿ.ಎ. ಕಂಕಣವಾಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ವೇದಿಕೆಯ ಮೇಲೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಭೀಮಶಿ ಮಗದುಮ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಸೀತವ್ವ ಕಾಳೆ, ಜಿಲ್ಲಾ ವೈದ್ಯಾಧಿಕಾರಿ ಡಾ. ಗುಂಡಪ್ಪ ಎಸ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎಸ್. ಎಚ್. ಅರೆಹುಣಶಿ, ತಾಲ್ಲೂಕು ಆರೋಗ್ಯಾಧಿಕಾರಿ ಬಸವರಾಜ ತೇಲಿ ಉಪಸ್ಥಿತರಿದ್ದರು. ಪ್ರಕಾಶ ಕಂಕಣವಾಡಿ ಸ್ವಾಗತಿಸಿದರು. ಮಹೇಶ ಬಾಗಲಕೋಟ ನಿರೂಪಿಸಿದರು.