ಕುಣಿಗಲ್: ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ರವಿಕಿರಣ್ ಪಕ್ಷೇತರರಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಪಟ್ಟಣದಲ್ಲಿ ಸಹಸ್ರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಅವರು ಉಮೇದುವಾರಿಕೆ ದಾಖಲಿಸಿದರು. ತಾಲ್ಲೂಕಿನ ವಿವಿಧೆಡೆಯಿಂದ ಸಾಕಷ್ಟು ಅಭಿಮಾನಿಗಳು ಪ್ರವಾಸಿ ಮಂದಿರದ ಸಮೀಪ ಆಗಮಿಸಿದ್ದರು. ಮೆರವಣಿಗೆಯಲ್ಲಿ ಶಾಲಾ ಬಾಲಕರು ಸೇರಿದಂತೆ, ಮಹಿಳೆಯರು ಹೆಚ್ಚಾಗಿ ಪಾಲ್ಗೊಂಡಿದ್ದರು.
ಚುನಾವಣೆಯನ್ನು ಗುರಿಯಾಗಿಟ್ಟುಕೊಂಡಿದ್ದ ರವಿಕಿರಣ್ ಅವರು ಟ್ರಸ್ಟ್ ಸ್ಥಾಪಿಸಿ ಸಮಾಜ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಕಾಂಗ್ರೆಸ್ನಿಂದ ಟಿಕೆಟ್ ದೊರೆಯುವುದಿಲ್ಲ ಎಂಬುದು ತಿಳಿಯುತ್ತಿದ್ದಂತೆ ತಟಸ್ಥವಾಗಿದ್ದರು.
ಕೊನೆ ಕ್ಷಣದಲ್ಲಿ ಟಿಕೆಟ್ ಪಡೆಯಲು ಸಾಕಷ್ಟು ಪ್ರಯತ್ನ ನಡೆಸಿದ್ದರೂ ಫಲಿಸಿರಲಿಲ್ಲ. ಶಾಸಕ ಬಿ.ಬಿ.ರಾಮಸ್ವಾಮಿಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ಖಚಿತವಾದ ನಂತರ ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿದ್ದರು.
ಇಂದು ನಾಮಪತ್ರ ಸಲ್ಲಿಸುವ ಮೂಲಕ ಕಾಂಗ್ರೆಸ್ನಲ್ಲಿ ಬಂಡಾಯದ ಬಾವುಟ ಹಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಲಿರುವ ರಾಮಸ್ವಾಮಿಗೌಡರಿಗೆ ರವಿಕಿರಣ್ ಸ್ಪರ್ಧೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಬಂಡಾಯದ ಬಿಸಿ ಚುನಾವಣೆ ಫಲಿತಾಂಶದ ಮೇಲೆ ಗೋಚರಿಸಲಿದೆ ಎಂದು ಹೇಳಲಾಗುತ್ತಿದೆ.
ರವಿಕಿರಣ್ ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆ ಹೊಂದಿದ್ದಾರೆ. ಈಗ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವುದು ಕ್ಷೇತ್ರದಲ್ಲಿ ಕುತೂಹಲ ಕೆರಳಿಸಿದೆ.