ಗೌರಿಬಿದನೂರು: ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ರಸಗೊಬ್ಬರ ವಿತರಣೆ ಕಾರ್ಯದಲ್ಲಿ ಯಾವುದೇ ರೀತಿಯ ಅಡಚಣೆ ತಲೆದೋರಬಾರದು. ರಸಗೊಬ್ಬರವನ್ನು ರೈತರಿಗೆ ಸಮರ್ಪಕ ರೀತಿಯಲ್ಲಿ ವಿತರಣೆ ಮಾಡಬೇಕು ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ರಸಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶನಿವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಸಗೊಬ್ಬರ ಮಾರಾಟಗಾರರ ಸಭೆ ನಡೆಸಿದ ಅವರು, `ರಸಗೊಬ್ಬರ ಅಭಾವದ ಕುರಿತು ರೈತರಿಂದ ಯಾವುದೇ ಕಾರಣಕ್ಕೂ ದೂರು ಬರಬಾರದು~ ಎಂದರು.
ರಸಗೊಬ್ಬರ ಮಾರಾಟಗಾರರು ನಿಗದಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು. ಮಾರಾಟ ಮಾಡಿರುವುದಕ್ಕೆ ಅಧಿಕೃತ ರಶೀದಿ ನೀಡಬೇಕು. ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರುವ ಪ್ರಕರಣ ಬೆಳಕಿಗೆ ಬಂದ್ಲ್ಲಲಿ, ಕಠಿಣ ಕ್ರಮ ತೆಗೆದುಕೊಳ್ಳ ಲಾಗುವುದು. ಕಾಳಸಂತೆಯಲ್ಲಿ ಮಾರಾಟ ಮಾಡುವವರ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ತಿಳಿಸಿದರು.
ಕೃಷಿ ಇಲಾಖೆ ಉಪನಿರ್ದೇಶಕಿ ಅನುರೂಪಾ ಮಾತನಾಡಿ, `ತಾಲ್ಲೂಕಿಗೆ ಅಗತ್ಯವಿರುವ ಒಟ್ಟು 339 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. ಬೇಡಿಕೆಗೆ ಅನುಗುಣವಾಗಿ ಪೂರೈಸ ಲಾಗುವುದು~ ಎಂದರು.
`ಖಾಸಗಿ ಮತ್ತು ಸೊಸೈಟಿಗಳಲ್ಲಿ ರಸಗೊಬ್ಬರ ಮಾರಾಟ ಮಾಡುವವರು ಅಧಿಕೃತ ರಶೀದಿ ನೀಡಬೇಕು. ಈ ನಿಯಮ ಉಲ್ಲಂಘಿಸಿದ್ದಲ್ಲಿ, 1985ರ ರಸಗೊಬ್ಬರ ನಿಯಂತ್ರಣ ಕಾಯ್ದೆಯಡಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುವುದು~ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೇಣುಗೋಪಾಲರೆಡ್ಡಿ, ಬೊಮ್ಮಣ್ಣ ಸಭೆಯಲ್ಲಿ ಉಪಸ್ಥಿತರಿದ್ದರು.