ಬೆಂಗಳೂರು: ಅಗ್ನಿ ಅನಾಹುತದಿಂದ ಹಾನಿಗೊಳಗಾಗಿದ್ದ ಶಿವಾಜಿನಗರದ ರಸೆಲ್ ಮಾರುಕಟ್ಟೆಯ ಪುನರ್ ನಿರ್ಮಾಣಕ್ಕೆ ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಫೆಬ್ರುವರಿ ತಿಂಗಳಲ್ಲೇ ಒಂದು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ. ಕೃಷ್ಣ ಗುರುವಾರ ಇಲ್ಲಿ ತಿಳಿಸಿದರು.
ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ವಿಧಾನಸೌಧಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರ ಜತೆ ಮಾತನಾಡಿದರು. `ರಸೆಲ್ ಮಾರುಕಟ್ಟೆಯ ಪುನರ್ ನಿರ್ಮಾಣಕ್ಕೆ ಹಣ ನೀಡುವುದಾಗಿ ಹೇಳಿದ್ದ ಎಸ್.ಎಂ. ಕೃಷ್ಣ ಅವರು ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ~ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಕೃಷ್ಣ, `ಫೆ. 27 ರಂದೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದು ಮಾರುಕಟ್ಟೆ ಪುನರ್ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೆ. ಆ ಪ್ರಕಾರ ಹಣ ಬಿಡುಗಡೆಯಾಗಿದೆ. ವಾಸ್ತವ ಸ್ಥಿತಿ ಗೊತ್ತಿಲ್ಲದೆ ಯಾವುದೋ ಒಂದು ಸಂದರ್ಭವನ್ನು ಮುಂದಿಟ್ಟುಕೊಂಡು ಸತ್ಯಕ್ಕೆ ದೂರವಾದ ಆರೋಪ ಮಾಡುವುದು ಸರಿಯಲ್ಲ~ ಎಂದ ತಿರುಗೇಟು ನೀಡಿದರು.