ರಾಮನಗರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ವಾಸಿಸುತ್ತಿರುವ ಕಾಲೋನಿಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಗುತ್ತಿಗೆದಾರರಿಗೆ ಸೂಚಿಸಿದರು.
ತಾಲ್ಲೂಕಿನ ಬಿಡದಿ ಹೋಬಳಿಯ ಸಿದ್ಧಾಬೋವಿ ಪಾಳ್ಯದ ದಲಿತ ಕಾಲೋನಿಯಲ್ಲಿ 3.50 ಲಕ್ಷ ರೂ.ಗಳ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಹಲವಾರು ವರ್ಷಗಳಿಂದ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ವಾಸಿಸುತ್ತಿರುವ ಕಾಲೊನಿಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿದೆ.
ಗುತ್ತಿಗೆದಾರರು ಸರ್ಕಾರದ ನಿಬಂಧನೆಗಳನ್ನು ಅನುಸರಿಸಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಬೇಕು. ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ತಿಳಿಸಿದರು.
ಮಾಗಡಿ ವಿದಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೃಹತ್ ನೀರಾವರಿ ಯೋಜನೆಗಳಿಲ್ಲ. ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆಗಳಿದೆ. ಅದಕ್ಕಾಗಿ ಕೊಳವೆ ಬಾವಿಗಳನ್ನು ಕೊರೆಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ.
ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಜನಸಂಪರ್ಕ ಸಭೆಗಳನ್ನು ನಡೆಸುತ್ತೇನೆ. ಜನರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನಿಡುತ್ತೇನೆ ಎಂದರು.
ತಾ.ಪಂ. ಅಧ್ಯಕ್ಷೆ ಸುಜಾತಶಿವಲಿಂಗಯ್ಯ, ಜಿ.ಪಂ. ಸದಸ್ಯೆ ಶಾಂತಮ್ಮ, ತಾ.ಪಂ.ಮಾಜಿ ಅಧ್ಯಕ್ಷ ಜಯಚಂದ್ರ, ಮಾಜಿ ಸದಸ್ಯ ಸಿ.ಎಚ್.ಪುಟ್ಟಯ್ಯ, ಬನ್ನಿಕುಪ್ಪೆ ಗ್ರಾ.ಪಂ.ಅಧ್ಯಕ್ಷ ಬೈರಪ್ಪ, ಮಾಜಿ ಅಧ್ಯಕ್ಷ ರಮೇಶ್, ಬಿಇಒ ಮಾದೇಗೌಡ, ಸಹಾಯಕ ಕೃಷಿ ನಿರ್ದೇಶಕ ರಾಮಪ್ರಸಾದ್, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬ್ಯಾಟಪ್ಪ ಮೊದಲಾದವರು ಉಪಸ್ಥಿತರಿದ್ದರು.