ಜೈಪುರ (ಪಿಟಿಐ): ರಾಜಸ್ತಾನ ವಿಧಾನಸಭೆಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶೇ 75ರಷ್ಟು ಮತದಾನವಾಗಿದೆ. ಕೆಲವು ಕಡೆಗಳಲ್ಲಿ ಹಿಂಸಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಬಿಎಸ್ಪಿ ಅಭ್ಯರ್ಥಿ ಜಗದೀಶ್ ಮೇಘವಾಲ್ ಅವರ ನಿಧನದ ಹಿನ್ನೆಲೆಯಲ್ಲಿ ಛುರು ಕ್ಷೇತ್ರದಲ್ಲಿ ಮತದಾನವನ್ನು ಡಿ.13ಕ್ಕೆ ಮುಂದೂಡಲಾಗಿದೆ.
ದಾಖಲೆಯ ಶೇ 74.38ರಷ್ಟು ಮತದಾರರು ತಮ್ಮ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಸಿ.ಎಂ. ಅಶೋಕ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಸೇರಿದಂತೆ 2,087 ಅಭ್ಯರ್ಥಿಗಳ ಭವಿಷ್ಯ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ದಾಖಲಾಗಿದೆ.
ಕೆಲವೆಡೆ ವಾಹನಗಳಿಗೆ ಬೆಂಕಿ ಹಚ್ಚಿದ ಮತ್ತು ಮತಗಟ್ಟೆಗಳನ್ನು ವಶಕ್ಕೆ ತೆಗೆದುಕೊಳ್ಳಲು ಹಾಗೂ ಮತಯಂತ್ರಗಳನ್ನು ಹಾಳು ಮಾಡಲು ಯತ್ನಿಸಿದ ಘಟನೆಗಳು ನಡೆದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಒಟ್ಟು 200 ಸ್ಥಾನ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ 199 ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆದಿದೆ.