ಬೆಂಗಳೂರು: ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಂ.ಡಿ.ಲಕ್ಷ್ಮೀನಾರಾಯಣ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಲಿಲ್ಲ ಎನ್ನುವ ಕಾರಣಕ್ಕೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ತಮ್ಮ ತಾಲ್ಲೂಕಿನಲ್ಲೇ (ತುರುವೇಕೆರೆ) ತಾವು ಹೇಳಿದವರಿಗೆ ಸಚಿವ ಸೋಮಣ್ಣ ಟಿಕೆಟ್ ನೀಡಲಿಲ್ಲ. ಹೀಗಾಗಿ ಪಕ್ಷದಲ್ಲಿ ಉಳಿಯುವುದಿಲ್ಲ ಎಂದು ಅವರು ರಾಜೀನಾಮೆ ಕೊಟ್ಟಿದ್ದರು. ನಂತರ ಗೃಹ ಸಚಿವ ಆರ್.ಅಶೋಕ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಲಕ್ಷ್ಮೀನಾರಾಯಣ ಅವರನ್ನು ಸಮಾಧಾನ ಮಾಡಿ, ಬಿಜೆಪಿ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರ ಬಳಿ ಕರೆದೊಯ್ದರು.
ಮೂವರು ಮುಖಂಡರ ಭರವಸೆ ಮೇಲೆ ಅವರು ರಾಜೀನಾಮೆ ಹಿಂದಕ್ಕೆ ಪಡೆಯಲು ಒಪ್ಪಿದರು. ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವ ಭರವಸೆ ಮುಖಂಡರಿಂದ ಸಿಕ್ಕಿದೆ. ಸೋಮಣ್ಣ ಅವರ ಕಾರ್ಯವೈಖರಿ ಬಗ್ಗೆ ಲಕ್ಷ್ಮೀನಾರಾಯಣ ಆಕ್ಷೇಪ ವ್ಯಕ್ತಪಡಿಸಿದರು ಎನ್ನಲಾಗಿದೆ.