ನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರು ತಮಗೆ ವಿಧಿಸಿರುವ ಮರಣ ದಂಡನೆ ಶಿಕ್ಷೆಯನ್ನು ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್ಗೆ ಸಲ್ಲಿಸಿದ ಮೇಲ್ಮನವಿ ವಿಚಾರಣೆಯನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಬೇಕೆನ್ನುವ ಕೋರಿಕೆಗೆ ತಮಿಳುನಾಡು ಸರ್ಕಾರ ಸೋಮವಾರ ಸರ್ವೋಚ್ಚ ನ್ಯಾಯಾಲಯದಲ್ಲಿ ವಿರೋಧ ವ್ಯಕ್ತಪಡಿಸಿದೆ.
ಈ ಅರ್ಜಿ ವಿಚಾರಣೆಗೆ ಸಂಬಂಧಿಸಿದ ಪ್ರಕರಣವನ್ನು ಹೈಕೋರ್ಟ್ನಿಂದ ಸುಪ್ರೀಂಕೋರ್ಟ್ಗೆ ವರ್ಗಾಯಿಸಬೇಕೆಂದು ಕೋರಿ ಎಲ್.ಕೆ.ವೆಂಕಟ್ ಎಂಬುವವರು ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ವಿಚಾರಣೆ ನಡೆಸುವುದಕ್ಕೆ ರಾಜ್ಯದಲ್ಲಿ ಅನುಕೂಲಕರ ವಾತಾವರಣವಿಲ್ಲ ಎಂದು ಅವರು ಹೇಳಿದ್ದರು.
ಆದರೆ ಈ ಕೋರಿಕೆಗೆ ವಿರೋಧ ವ್ಯಕ್ತಪಡಿಸಿದ ತಮಿಳುನಾಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಗುರುಕೃಷ್ಣ ಕುಮಾರ್, ವೆಂಕಟ್ ಅವರ ಅರ್ಜಿಯ ಕಾನೂನುಬದ್ಧತೆಯನ್ನು ಪ್ರಶ್ನಿಸಿದರು.