ನವದೆಹಲಿ (ಪಿಟಿಐ): ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ನೇಮಕದ ಸುತ್ತ ಎದ್ದಿರುವ ವಿವಾದಕ್ಕೆ ಸಂಬಂಧಿಸಿ ತನ್ನ ಸೂಚನೆಯನ್ನು ತಪ್ಪಾಗಿ ಆದೇಶವೆಂದು ಅರ್ಥೈಸಿ ಕರ್ನಾಟಕ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಸುಪ್ರೀಂಕೋರ್ಟ್ ಶುಕ್ರವಾರ ಆಕ್ಷೇಪ ವ್ಯಕ್ತಪಡಿಸಿದೆ.
ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಭವಾನಿ ಸಿಂಗ್ ಅವರನ್ನು ತೆಗೆದುಹಾಕಿರುವ ಕರ್ನಾಟಕ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಜಯಲಲಿತಾ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಎಸ್. ಚೌಹಾಣ್ ಮತ್ತು ಎಸ್.ಎ. ಬಾಬ್ಡೆ ಅವರನ್ನೊಳಗೊಂಡ ಪೀಠ ಈ ವಿರೋಧ ಸೂಚಿಸಿದೆ.
‘ನಾವೆಂದೂ ನಿರ್ದೇಶನ ನೀಡಿಲ್ಲ. ಕರ್ನಾಟಕ ಸರ್ಕಾರವೇ ವಕೀಲ ಜಿ. ಭವಾನಿ ಸಿಂಗ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸ್ಥಾನದಿಂದ ತೆಗೆದುಹಾಕುವ ಆದೇಶವನ್ನು ಹಿಂತೆಗೆದುಕೊಳ್ಳುವ ಅಧಿಸೂಚನೆ ಹೊರಡಿಸಿದೆ’ ಎಂದು ನ್ಯಾಯಪೀಠ ತಿಳಿಸಿದೆ.
ಪ್ರಕರಣದಲ್ಲಿ ಭವಾನಿ ಸಿಂಗ್ ಅವರಿಗೆ ಹಾಜರಾಗದಂತೆ ಸೂಚಿಸಿ ಹೊಸ ಅಧಿಸೂಚನೆ ಹೊರಡಿಸಿರುವ ವಿವಾದಕ್ಕೆ ಸಂಬಂಧಿಸಿದಂತೆ ಇನ್ನು 10 ದಿನಗಳಲ್ಲಿ ಪ್ರತಿಕ್ರಿಯಿಸುವಂತೆ ಕರ್ನಾಟಕ ಸರ್ಕಾರಕ್ಕೆ ನ್ಯಾಯಪೀಠ ನೋಟಿಸ್ ಜಾರಿಗೊಳಿಸಿದೆ. ಪ್ರಕರಣದಲ್ಲಿ ಹೊಸ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸದಂತೆ ಕರ್ನಾಟಕ ಸರ್ಕಾರವನ್ನು ನಿರ್ಬಂಧಿಸಿ ಆ.30ರಂದು ತಾನು ನೀಡಿದ ಆದೇಶ ಮುಂದುವರಿಯಲಿದೆ ಎಂದೂ ನ್ಯಾಯಪೀಠ ಹೇಳಿದೆ.
ಕರ್ನಾಟಕ ಸರ್ಕಾರವು ಸೆ. 6ರಂದು ಅಟಾರ್ನಿ ಜನರಲ್ ಜಿ.ಇ. ವಹನ್ವತಿ ಅವರ ಮೂಲಕ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಭವಾನಿ ಸಿಂಗ್ ಅವರನ್ನು ತೆಗೆದುಹಾಕುವ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ನ್ಯಾಯಾಲಯವನ್ನು ಕೋರಿತ್ತು. ಅಲ್ಲದೆ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಮುಂದೆ ಎಲ್ಲ ಅಗತ್ಯ ದಾಖಲೆಪತ್ರಗಳನ್ನು ಸಲ್ಲಿಸಿ, ಹೊಸ ಪ್ರಾಸಿಕ್ಯೂಟರ್ ನೇಮಿಸುವುದಾಗಿಯೂ ನ್ಯಾಯಾಲಯಕ್ಕೆ ಅದು ತಿಳಿಸಿತ್ತು.