ಬೆಂಗಳೂರು: ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ಆಗ್ರಹಿಸಿ ಬಿಜೆಪಿ ಶಾಸಕರು ರಾಜಭವನದ ಮುಂದೆ ಮಂಗಳವಾರ ಪ್ರತಿಭಟನೆ ನಡೆದರು. ಧರಣಿ ನಡೆಸಲು ಯತ್ನಿಸಿದ ಎಲ್ಲ ಶಾಸಕರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಲಾಯಿತು.
ರಾಜಭವನ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ನಂತರ ಪಾದಯಾತ್ರೆ ಮೂಲಕ ರಾಜಭವನದವರೆಗೆ ತೆರಳಿದ ಎಲ್ಲ ಶಾಸಕರೂ ‘ಪಕ್ಷಪಾತಿ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಿ’ ಎಂದು ಕೇಂದ್ರ ಸರ್ಕಾರವನ್ನು ಆಗ್ರಹಪಡಿಸಿದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ರಾಜ್ಯಸಭಾ ಸದಸ್ಯ ವೆಂಕಯ್ಯನಾಯ್ಡು, ಸಂಸದರಾದ ಡಿ.ವಿ.ಸದಾನಂದ ಗೌಡ, ಡಿ.ಬಿ.ಚಂದ್ರೇಗೌಡ, ವಿಧಾನಸಭೆ ಮತ್ತು ವಿಧಾನ ಪರಿಷತ್ನ ಬಿಜೆಪಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಶಾಸಕರು, ರಾಜಭವನ ಮುಂದೆ ಧರಣಿ ನಡೆಸಲು ಯತ್ನಿಸಿದಾಗ ಅವರನ್ನು ಪೊಲೀಸರು ಬಂಧಿಸಿದರು. ಪೊಲೀಸ್ ಬಸ್ಗಳಲ್ಲಿ ತುಂಬಿಕೊಂಡು ಎಲ್ಲರನ್ನೂ ಅಶೋಕನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿಂದ ನಂತರ ಬಿಡುಗಡೆ ಮಾಡಲಾಯಿತು.
‘ಬೇಡ ಬೇಡ ಭಾರದ್ವಾಜ್ ಬೇಡ’, ‘ಆಗಬೇಡಿ ಕಾಂಗ್ರೆಸ್, ಜೆಡಿಎಸ್ ಏಜೆಂಟ್’... ಹೀಗೆ ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು. ಘೋಷಣಾ ಫಲಕಗಳನ್ನು ಪ್ರದರ್ಶಿಸಿ, ಕೇಂದ್ರ ಸರ್ಕಾರದ ವಿರುದ್ಧವೂ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಯಾವೊಬ್ಬ ಸಚಿವರೂ ಭಾಗವಹಿಸಲಿಲ್ಲ.ಇದಕ್ಕೂ ಮುನ್ನ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಡಿಯೂರಪ್ಪ ಮಾತನಾಡಿ, ರಾಜಭವನದ ಮುಂದೆ ಶಾಂತಿಯುತ ಪ್ರತಿಭಟನೆ ಮಾಡುವಂತೆ ಸಲಹೆ ನೀಡಿದರು. ಪೊಲೀಸರ ಬಂಧನದ ನಂತರ ಅಲ್ಲಿಂದ ವಾಪಸ್ ತಮ್ಮ ಊರುಗಳಿಗೆ ಹೋಗಿ ಎನ್ನುವ ಸಲಹೆಯನ್ನು ಅವರು ನೀಡಿದರು.