ಬೆಂಗಳೂರು: `ಸಂವಿಧಾನಕ್ಕೆ ಅನುಗುಣವಾಗಿ ಯಾವ ರೀತಿ ಲೋಕಾಯುಕ್ತರನ್ನು ನೇಮಕ ಮಾಡಬೇಕು ಎಂಬುದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರಿಗೆ ಗೊತ್ತಿದೆ. ಈ ವಿಷಯದಲ್ಲಿ ನಾವು ಹೇಳುವ ಅಗತ್ಯವಿಲ್ಲ~ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಅಭಿಪ್ರಾಯಪಟ್ಟರು.
ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ರಾಜ್ಯಪಾಲರು ಸಂವಿಧಾನಕ್ಕೆ ಬದ್ಧವಾಗಿ ಕರ್ತವ್ಯಗಳನ್ನು ನಿರ್ವಹಿಸಬೇಕು. ಅದನ್ನು ಪದೇ ಪದೇ ನೆನಪು ಮಾಡಿಕೊಡುವ ಅಗತ್ಯವಿಲ್ಲ~ ಎಂದರು.
ಲೋಕಾಯುಕ್ತರ ನೇಮಕದಲ್ಲಿ ಯಾಕೆ ವಿಳಂಬವಾಗುತ್ತಿದೆ ಎಂಬುದನ್ನು ರಾಜ್ಯಪಾಲರನ್ನೇ ಕೇಳಿ ಎಂದು ಉತ್ತರಿಸಿದ ಅವರು, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಫಲಿತಾಂಶ ಪಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರ ಜಾದು ಈ ರಾಜ್ಯಗಳಲ್ಲಿ ನಡೆಯುವುದಿಲ್ಲ ಎಂದರು.
ಇದಕ್ಕೂ ಮುನ್ನ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಹೊರಟಿರುವುದು ಸರಿಯಲ್ಲ ಎಂದರು. ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರ ಗೌಡ, ಶಾಸಕ ಡಾ.ಅಶ್ವತ್ಥನಾರಾಯಣ, ಬಿಜೆಪಿ ನಗರ ಘಟಕದ ಅಧ್ಯಕ್ಷ ಸುಬ್ಬಣ್ಣ ಇದ್ದರು.