ಬೆಂಗಳೂರು: ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರ ಕರೆ ಮೇರೆಗೆ ಶನಿವಾರ ಸಂಜೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ರಾಜಭವನಕ್ಕೆ ದಿಢೀರ್ ಭೇಟಿ ನೀಡಿ ಚರ್ಚಿಸಿದರು. ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯ ಅನುಷ್ಠಾನ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ರಾಜ್ಯಪಾಲರು ಮಾಹಿತಿ ಪಡೆದರು.
ಕೇಂದ್ರ ಉನ್ನತಾಧಿಕಾರ ಸಮಿತಿಯ ಸಲಹೆ ಮೇರೆಗೆ ಸುಪ್ರೀಂಕೋರ್ಟ್ ಕೆಲ ಕಂಪೆನಿಗಳ ಗಣಿ ವ್ಯವಹಾರವನ್ನು ಸಿಬಿಐ ತನಿಖೆಗೆ ಆದೇಶಿಸಿದೆ. ಈ ಕುರಿತು ಯಾವ ಕ್ರಮ ತೆಗೆದುಕೊಳ್ಳುತ್ತೀರಿ ಎಂಬುದರ ಬಗ್ಗೆಯೂ ಮುಖ್ಯಮಂತ್ರಿಯಿಂದ ಮಾಹಿತಿ ಪಡೆದರು ಎಂದು ಗೊತ್ತಾಗಿದೆ.
ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ವಿರುದ್ಧ ವಂಚನೆ ಆರೋಪ ಇದ್ದು, ಆ ಕುರಿತೂ ಮಾಹಿತಿ ಕೋರಿದರು ಎನ್ನಲಾಗಿದೆ. ತಮ್ಮ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್ ಜತೆ ರಾಜಭವನ ಪ್ರವೇಶಿಸಿದ ಮುಖ್ಯಮಂತ್ರಿ ಅರ್ಧ ಗಂಟೆ ಕಾಲ ಅಲ್ಲೇ ಇದ್ದರು.