ಚಿಕ್ಕಮಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಹತ್ಯೆಯಾದ ದಿನವಾದ ಬುಧವಾರ ನಗರದ ಗಾಂಧಿ ಮಂಟಪದಲ್ಲಿ ಗಾಂಧಿ ಪ್ರತಿಮೆ ಎದುರು ಹುತಾತ್ಮರ ದಿನವನ್ನು ಶ್ರದ್ಧೆಯಿಂದ ಆಚರಿಸಲಾಯಿತು.
ಜಿಲ್ಲಾಡಳಿತ ಆಯೋಜಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಎನ್.ಜೀವರಾಜ್, ಸಿ.ಟಿ.ರವಿ ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ನಗರಸಭೆ ಅಧ್ಯಕ್ಷ ಸಿ.ಆರ್.ಪ್ರೇಮ್ಕುಮಾರ್ ಸೇರಿದಂತೆ ಗಣ್ಯರು ರಾಷ್ಟ್ರಪಿತನ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.
ಇದೇ ವೇಳೆ ಮಹಾತ್ಮಗಾಂಧಿ ಅವರಿಗೆ ಪ್ರಿಯವಾದ ರಘುಪತಿ ರಾಘವ ರಾಜಾ ರಾಂ ಮತ್ತು ವೈಷ್ಣವ ಜನತೊ ತೇನೇ ಕಹಿಯೇ ಹಾಗೂ ಭಗವದ್ಗೀತೆಯನ್ನು ವಿದ್ಯಾರ್ಥಿಗಳು ಹಾಡುವ ಮೂಲಕ ನಮನ ಸಲ್ಲಿಸಿದರು. ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಧಾರ್ಮಿಕ ಮುಖಂಡರು ಸರ್ವ ಧರ್ಮ ಪ್ರಾರ್ಥನೆ ನಡೆಸಿದರು.
ರಾಷ್ಟ್ರಪಿತನ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷ ಮೌನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಜಿಲ್ಲಾಧಿಕಾರಿ ಎಸ್.ಟಿ.ಅಂಜನ್ ಕುಮಾರ್, ಪೊಲೀಸ್ ಮುಖ್ಯಾಧಿಕಾರಿ ಶಶಿಕುಮಾರ್, ಜಿ.ಪಂ. ಸಿಇಒ ಪಿ.ಶಿವಶಂಕರ್, ಉಪವಿಭಾ ಗಾಧಿಕಾರಿ ಪ್ರಶಾಂತ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕಾಂತರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.