ಯಲಹಂಕ: ಬೆಳೆಗಳಲ್ಲಿ ಹಾನಿಯನ್ನುಂಟುಮಾಡುವ ಕೀಟಗಳ ನಿಯಂತ್ರಣಕ್ಕೆ ರಾಸಾಯನಿಕಗಳನ್ನು ಅತಿಯಾಗಿ ಬಳಸುತ್ತಿರುವ ಪರಿಣಾಮ ಆಹಾರ, ನೆಲ, ಜಲ ಎಲ್ಲವೂ ಕಲುಷಿತಗೊಳ್ಳುತ್ತಿದೆ ಎಂದು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ.ಜಿ.ಕೆ.ವೀರೇಶ್ ಆತಂಕ ವ್ಯಕ್ತಪಡಿಸಿದರು.
ಬೆಂಗಳೂರು ಕೃಷಿ ವಿಶ್ವವಿಶ್ವವಿದ್ಯಾಲಯದ ಕೃಷಿ ಕೀಟಶಾಸ್ತ್ರ ವಿಭಾಗ ಹಾಗೂ ಭಾರತೀಯ ಕೀಟ ವಿಜ್ಞಾನ ಅಭಿವೃದ್ಧಿ ಸಂಸ್ಥೆ, ಪಂಜಾಬ್ ಕೃಷಿ ವಿಶ್ವವಿದ್ಯಾಲಯದ (ಲೂದಿಯಾನ) ಜಂಟಿ ಆಶ್ರಯದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಟ್ಟದ 4ನೇ ಕೀಟವಿಜ್ಞಾನ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಸಾಯನಿಕಗಳ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆಮಾಡಿ, ಪರಿಸರ ಮಾಲಿನ್ಯವನ್ನು ತಡೆಗಟ್ಟುವ ದಿಸೆಯಲ್ಲಿ ಕೀಟಶಾಸ್ತ್ರಜ್ಞರು ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯವಿದೆ ಎಂದರು.
ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ನಾರಾಯಣಗೌಡ ಮಾತನಾಡಿ, ಕೀಟಶಾಸ್ತ್ರದಲ್ಲಿ ಪದವಿಯನ್ನು ಪಡೆಯುವ ವಿದ್ಯಾರ್ಥಿಗಳು ರೈತರ ಹೊಲಗಳಿಗೆ ತೆರಳಿ ಸಮಸ್ಯೆಗಳನ್ನು ಸ್ಪಷ್ಟವಾಗಿ ಗುರುತಿಸಿ, ಸೂಕ್ತ ಪರಿಹಾರಗಳನ್ನು ನೀಡಬೇಕು ಎಂದು ಸಲಹೆ ನಿಡಿದರು.
ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ವಿ.ಪಾಟೀಲ್ ಅವರು, ಕೃಷಿ ಕೀಟಶಾಸ್ತ್ರ ವಿಜ್ಞಾನಚಟುವಟಿಕೆಗಳ ಕುರಿತ ಸ್ಮರಣಸಂಚಿಕೆ ಬಿಡುಗಡೆ ಮಾಡಿದರು.
ಸುಖುಬಾ ವಿಶ್ವವಿಶ್ವವಿದ್ಯಾಲಯದ (ಜಪಾನ್) ಪ್ರೊ. ಹಿರೋಶಿ ಹೊಂಡಾ, ಭಾರತೀಯ ಕೀಟ ವಿಜ್ಞಾನ ಅಭಿವೃದ್ಧಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ರಮೇಶ್ ಅರೋರ, ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ.ಎಂ.ಎ.ಶಂಕರ್, ಕೃಷಿ ಕೀಟಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಎ.ಕೆ.ಚಕ್ರವರ್ತಿ ಮೊದಲಾದವರು ಉಪಸ್ಥಿತರಿದ್ದರು.