ಹೊಸಪೇಟೆ: ಜನವರಿ 10, 11 ಹಾಗೂ 12ರಂದು ನಡೆಯಲಿರುವ ಹಂಪಿ ಉತ್ಸವಕ್ಕೆ ರೂ5 ಕೋಟಿ ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೋಮವಾರ ಇಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ತಿರ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ, ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ ನಾಯಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರಿಗೆ ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಉತ್ಸವದ ತಯಾರಿ ಕುರಿತು ಮಾಹಿತಿ ನೀಡಿದರು.
‘ಕಳೆದ ಬಾರಿ ಹಂಪಿ ಉತ್ಸವಕ್ಕೆ ರೂ6 ಕೋಟಿ ವೆಚ್ಚವಾಗಿತ್ತು. ಈ ಬಾರಿ ಹಣದ ಕೊರತೆಯಿಂದಾಗಿ ರೂ 5 ಕೋಟಿಗೆ ಇಳಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ತಲಾ ರೂ 1 ಕೋಟಿ ಅನುದಾನ ನೀಡಲು ನಿರ್ಧರಿಸಿವೆ. ರೂ 2.36 ಕೋಟಿಯನ್ನು ದೇಣಿಗೆ ಹಾಗೂ ಉತ್ಸವದ ಆದಾಯದಿಂದ ಸಂಗ್ರಹಿಸಲಾಗುವುದು. ಕೊರತೆಯಾಗುವ ಅನುದಾನವನ್ನು ಎರಡೂ ಇಲಾಖೆಗಳು ಭರಿಸಬೇಕು’ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.