ಬೆಂಗಳೂರು: ನಗರದ ಉತ್ತರ, ಪಶ್ಚಿಮ ಹಾಗೂ ಈಶಾನ್ಯ ವಿಭಾಗದ ಪೊಲೀಸರು ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸಿ ಸುಮಾರು ರೂ 8.61 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
`ನಗರ ಪೊಲೀಸರು ಇಷ್ಟು ಪ್ರಮಾಣದಲ್ಲಿ ಪ್ರಕರಣಗಳನ್ನು ಪತ್ತೆ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ' ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.
`ಪೊಲೀಸರು ಜಪ್ತಿ ಮಾಡಿದ ವಸ್ತುಗಳ ಪ್ರದರ್ಶನವನ್ನು ನಿಯಮಿತವಾಗಿ ನಡೆಸುವುದರಿಂದ ಜನರಲ್ಲಿ ಪೊಲೀಸ್ ಇಲಾಖೆ ಬಗ್ಗೆ ವಿಶ್ವಾಸ ವೃದಿ ಜತೆಗೆ, ಅಪರಾಧ ಚಟುವಟಿಕೆಗಳ ಬಗ್ಗೆ ಜನ ಪೊಲೀಸರಿಗೆ ಮಾಹಿತಿ ನೀಡಲು ಸಹಕಾರಿಯಾಗುತ್ತದೆ' ಎಂದರು.
`ಸಿಬ್ಬಂದಿ ಆರು ತಿಂಗಳಲ್ಲಿ 637 ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಿ 475 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 18 ಕೆ.ಜಿ ಚಿನ್ನಾಭರಣ, 26 ಕೆ.ಜಿ ಬೆಳ್ಳಿ ವಸ್ತುಗಳು ಹಾಗೂ ರೂ 31.80 ಲಕ್ಷ ನಗದು ಜಪ್ತಿ ಮಾಡಲಾಗಿದೆ' ಎಂದು ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ತಿಳಿಸಿದರು.
ವಶಪಡಿಸಿಕೊಂಡ ವಸ್ತುಗಳನ್ನು ಅವುಗಳ ವಾರಸುದಾರರಿಗೆ ಒಪ್ಪಿಸಲಾಯಿತು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಕಮಲ್ಪಂತ್, ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಸ್.ಮುರುಗನ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.