ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಷ್ಮೆ ಕೃಷಿ ಅಭಿವೃದ್ಧಿಗೆ ಭರವಸೆ

Last Updated 13 ಜನವರಿ 2011, 8:45 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ರೇಷ್ಮೆ ಕೃಷಿಕರ ಹಿತರಕ್ಷಣೆಗಾಗಿ ವಿವಿಧ ಯೋಜನೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು. ರೇಷ್ಮೆ ಕೃಷಿಕರು ವರ್ಷಗಳಿಂದ ಎದುರಿಸುತ್ತಿರುವ ಸಂಕಷ್ಟ ಪರಿಹರಿಸಲಾಗುವುದು ಎಂದು ರೇಷ್ಮೆ ಸಚಿವ ಬಿ.ಎನ್.ಬಚ್ಚೇಗೌಡ ತಿಳಿಸಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆಯ ಸದಸ್ಯರು ಸಲ್ಲಿಸಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ರೇಷ್ಮೆಗೆ ಭಾರಿ ಬೇಡಿಕೆಯಿದೆ. ರೇಷ್ಮೆ ಕೃಷಿ ಚಟುವಟಿಕೆಗಳ ಮೇಲೆ ರೈತರು ಅವಲಂಭಿತರಾಗಿದ್ದಾರೆ’ ಎಂದರು.

ರೇಷ್ಮೆ ಕೃಷಿ ಕ್ಷೇತ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಬದಲಾವಣೆಗಳಿಂದ ರೈತರ ಮೇಲೆ ದುಷ್ಪರಿಣಾಮ ಬೀರುತ್ತಿರುವುದು ಗಮನಕ್ಕೆ ಬಂದಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳನ್ನು ಸ್ಪಂದಿಸಿ ಶೀಘ್ರವೇ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ತಾಲ್ಲೂಕುಗಳು ಸೇರಿದಂತೆ ಇತರ ತಾಲ್ಲೂಕುಗಳಲ್ಲಿನ ರೇಷ್ಮೆ ಮಾರುಕಟ್ಟೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಹೆಚ್ಚಿನ ಪ್ರೋತ್ಸಾಹ ಧನ ಒದಗಿಸುವುದರ ಮೂಲಕ ರೇಷ್ಮೆ ಕೃಷಿಕರ ಸಮಸ್ಯೆ ಪರಿಹರಿಸಲು  ಆದ್ಯತೆ ನೀಡಲಾಗುವುದು ಎಂದು ಬಚ್ಚೇಗೌಡ  ಭರವಸೆ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲಾ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆಯ ಸಂಚಾಲಕ ಯಲುವಹಳ್ಳಿ ಸೊಣ್ಣೇಗೌಡ , ‘ಚೀನಾದಿಂದ 2500 ಮೆಟ್ರಿಕ್ ಟನ್ ರೇಷ್ಮೆಯನ್ನು ಆಮದು ಮಾಡಿಕೊಳ್ಳುವ ಬಗ್ಗೆ ಕೇಂದ್ರ ಆದೇಶ ನೀಡಿದೆ. ಇದು ರೇಷ್ಮೆ ಕೃಷಿಕರಿಗೆ ಸಂಕಷ್ಟವಾಗಲಿದೆ. ಈ ಆಮದು ಪ್ರಕ್ರಿಯೆಯನ್ನು ತಡೆಗಟ್ಟುವಂತೆ ರಾಜ್ಯಸರ್ಕಾರದ ವತಿಯಿಂದ ಮನವಿ ಮಾಡಬೇಕು’ ಎಂದು ಕೋರಿದರು.

ವೇದಿಕೆ ಅಧ್ಯಕ್ಷ ಮಳ್ಳೂರು ಶಿವಣ್ಣ, ಸಂಘಟನಾ ಕಾರ್ಯದರ್ಶಿಗಳಾದ ಮಳ್ಳೂರು ಹರೀಶ್, ಕೆಂಪರೆಡ್ಡಿ, ಭಾಸ್ಕರರೆಡ್ಡಿ, ಆಂಜನೇಯರೆಡ್ಡಿ, ಅಹಮದ್ ಹುಸೇನ್, ವೆಂಕಟೇಶ್, ಹಿತ್ತಲಹಳ್ಳಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT