ಬೆಂಗಳೂರು: `ನನಗೆ ರೈತ ಒಂದು ಕಣ್ಣಾದರೆ, ಕಾರ್ಮಿಕ ಮತ್ತೊಂದು ಕಣ್ಣು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಆದ್ಯತೆ ನೀಡುತ್ತೇನೆ' ಎಂದು ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.
ಕೆಜೆಪಿ ಇಲ್ಲಿನ ಶಿಕ್ಷಕರ ಸದನದ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಮಿಕ ಪ್ರತಿನಿಧಿಗಳ ಸಮಾವೇಶ ಹಾಗೂ ಕಾರ್ಮಿಕ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೆಜೆಪಿ ಕಾರ್ಮಿಕ ಘಟಕಕ್ಕೆ ಎಲ್.ಕಾಳಪ್ಪ ಅವರನ್ನು ಅಧ್ಯಕ್ಷರಾಗಿ ಘೋಷಿಸಿದರು. ಸಭೆಯಲ್ಲಿ ಸೇರಿದ್ದ ಕಾರ್ಮಿಕ ಪ್ರತಿನಿಧಿಗಳು ಅಧ್ಯಕ್ಷರ ಆಯ್ಕೆಯನ್ನು ಸರ್ವಾನುಮತದಿಂದ ಅಂಗೀಕರಿಸಿದರು.
ಸಿದ್ಧ ಉಡುಪು ತಯಾರಿಕಾ ಘಟಕಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ವೇತನ ಹೆಚ್ಚಳ ಮತ್ತು ಸೇವಾ ಭದ್ರತೆ, ಅಂಗನವಾಡಿ ಕಾರ್ಮಿಕರನ್ನೂ ಸರ್ಕಾರಿ ನೌಕರರೆಂದು ಪರಿಗಣಿಸುವುದು, ಗೃಹ ನಿರ್ಮಾಣ ಆವರ್ತ ನಿಧಿ ಯೋಜನೆ ಜಾರಿ, ಕಾರ್ಮಿಕರು ಮತ್ತು ಅವರ ಕುಟುಂಬದವರಿಗೆ ಕಡಿಮೆ ದರದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಪ್ರವಾಸಕ್ಕೆ ಅವಕಾಶ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟ ಕಾಳಪ್ಪ, ವಿಧಾನಸಭಾ ಚುನಾವಣೆಯ ಪಕ್ಷದ ಪ್ರಣಾಳಿಕೆಯಲ್ಲಿ ಈ ಎಲ್ಲ ಅಂಶಗಳನ್ನು ಸೇರಿಸಬೇಕು ಎಂದು ಆಗ್ರಹಿಸಿದರು.
ಕಾರ್ಮಿಕ ಮುಖಂಡ ಮೈಕೆಲ್ ಬಿ.ಫರ್ನಾಂಡಿಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಮಿಕರು ಸಮಾಜದ ಬೆನ್ನೆಲುಬು. ಅವರ ಪರಿಶ್ರಮ ಇಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ದೊರಯಬೇಕಾದರೆ, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರಾತಿನಿಧ್ಯ ಪಡೆಯಬೇಕು. ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಲು ಪ್ರತಿ ಜಿಲ್ಲೆಯ ಒಬ್ಬ ಕಾರ್ಮಿಕ ಮುಖಂಡನಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.