ರಾಯಚೂರು: ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಗ್ರಾಮೀಣ ಪ್ರದೇಶಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶುಕ್ರವಾರ ಇಲ್ಲಿ ಎತ್ತಿನ ಬಂಡಿ ಮೂಲಕ ಪ್ರತಿಭಟನೆ ನಡೆಸಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಚಂದ್ರಮೌಳೇಶ್ವರ ವೃತ್ತ, ಮಹಾವೀರ ವೃತ್ತದಿಂದ ಬಟ್ಟೆ ಬಜಾರ, ಟಿಪ್ಪುಸುಲ್ತಾನ್ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡರಿಗೆ ಮನವಿ ಸಲ್ಲಿಸಿದರು.
ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಅಸಮರ್ಪಕ ನೀರು ಪೂರೈಕೆಯಿಂದ ತುಂಗಭದ್ರಾ ಎಡದಂಡೆ ಕಾಲುವೆಯ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ಹರಿದು ಬರುತ್ತಿಲ್ಲ ಎಂದು ಸಂಘ ಆರೋಪಿಸಿದೆ.
ಜಿಲ್ಲಾ ಕಾರ್ಯಾಧ್ಯಕ್ಷ ಜಂಬನಗೌಡ ಕಡಗಂದೊಡ್ಡಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಗೋಡಿಹಾಳ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನಪಾಷಾ ದಿದ್ದಗಿ, ಉಪಾಧ್ಯಕ್ಷರಾದ ಸೂಗಯ್ಯಸ್ವಾಮಿ, ರಾಮಣ್ಣ ಬನ್ನಿಗೋಳ, ತಾಲ್ಲೂಕು ಅಧ್ಯಕ್ಷರಾದ ಶರಣಪ್ಪ ಮಳ್ಳಿ, ಖಾಜಾಹುಸೇನ್, ಬಸವರಾಜ ಶಿವಪುತ್ರಗೌಡ ಪ್ರತಿಭಟನೆಯಲ್ಲಿ ಇದ್ದರು.