ಬೆಂಗಳೂರು: ಕೇರಳ, ಮಹಾರಾಷ್ಟ್ರ ಮಾದರಿಯಲ್ಲಿ 60 ವರ್ಷ ಮೀರಿದ ಎಲ್ಲ ರೈತರಿಗೆ ಮಾಸಿಕ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಹಾಗೂ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಕನಿಷ್ಠ 10 ಸಾವಿರ ವೇತನ ನಿಗದಿಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಸಿಪಿಐ ರಾಜ್ಯ ಬಜೆಟ್ ಅಧಿವೇಶನಕ್ಕೂ ಮುನ್ನ ಚಳವಳಿ ನಡೆಸಲು ನಿರ್ಧರಿಸಿದೆ.
ಜ. 12ರಿಂದ 14ರವರೆಗೆ ನಗರದಲ್ಲಿ ನಡೆದ ಪಕ್ಷದ 21ನೇ ರಾಜ್ಯ ಸಮ್ಮೇಳನದಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಪಿ.ವಿ. ಲೋಕೇಶ್ ಹಾಗೂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ. ಸಿದ್ದನಗೌಡ ಪಾಟೀಲ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಿಪಿಐ ಸಹ ಕಾರ್ಯದರ್ಶಿಗಳಾದ ಶೌಕತ್ ಅಲಿ ಅಲೂರ, ಸಾತಿ ಸುಂದರೇಶ್ ಉಪಸ್ಥಿತರಿದ್ದರು.