ಬೆಂಗಳೂರು: ‘ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬೆಂಗಳೂರು- ಕನಕಪುರ- ಮಳವಳ್ಳಿ- ಕೊಳ್ಳೇಗಾಲ- ಚಾಮರಾಜನಗರ ರೈಲು ಮಾರ್ಗಕ್ಕೆ ಈ ವರ್ಷವೂ ಮಂಜೂರಾತಿ ದೊರೆಯದಿರುವುದು ರಾಜ್ಯಕ್ಕಾದ ಅನ್ಯಾಯ’ ಎಂದು ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯ ದೂರಿದ್ದಾರೆ.
ಈ ಬಾರಿಯ ರೈಲ್ವೆ ಬಜೆಟ್ನಲ್ಲಿ ಈ ಯೋಜನೆಯನ್ನು ಸೇರಿಸುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಆಶ್ವಾಸನೆ ನೀಡಿದ್ದರು. ಆದರೆ ಬಜೆಟ್ನಲ್ಲಿ ಈ ಯೋಜನೆಗೆ ಹಸಿರು ನಿಶಾನೆ ದೊರೆಯದಿರುವುದು ಈ ಭಾಗದ ಜನತೆಯಲ್ಲಿ ತೀವ್ರ ನಿರಾಶೆ ಉಂಟುಮಾಡಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.