ಹುಬ್ಬಳ್ಳಿ: ಬಾಗಲಕೋಟೆ, ವಿಜಾಪುರ ಹಾಗೂ ಗದಗ ಭಾಗಕ್ಕೆ ಸಮರ್ಪಕ ರೈಲು ಸಂಪರ್ಕ ಕಲ್ಪಿಸುವುದು ಹಾಗೂ ಕುಡಚಿ ಬಾಗಲಕೋಟೆ ಬ್ರಾಡ್ಗೇಜ್ ಮಾರ್ಗವನ್ನು ಬೇಗ ಪೂರ್ಣಗೊಳಿಸ ಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಬ್ರಾಡ್ಗೇಜ್ ರೈಲ್ವೆ ಹೋರಾಟ ಸಮಿತಿಯ ಆಶ್ರಯದಲ್ಲಿ ಮೂರನೇ ದಿನ ನೈರುತ್ಯ ರೈಲ್ವೆ ವಲಯ ಕಚೇರಿಯ ಮುಂದೆ ಅರೆಬೆತ್ತಲೆ ಪ್ರತಿಭಟನೆ ನಡೆಯಿತು.
ಉತ್ತರ ಕರ್ನಾಟಕ ಭಾಗದ ರೈಲ್ವೆ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣ ಗೊಳಿಸಬೇಕು, ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ಕಾಮಗಾರಿಯನ್ನು ಆರಂಭಿಸಬೇಕು ಹಾಗೂ ಉತ್ತರ ಕರ್ನಾಟಕದ ಜನತೆಗೆ ಇನ್ನೂ ಸಮರ್ಪಕ ರೈಲು ಸೇವೆಯನ್ನು ಒದಗಿಸಬೇಕು ಎಂದು ಆಗ್ರಹಿಸಿ ಹೋರಾಟ ಸಮಿತಿ ನಡೆಸಿರುವ ಪ್ರತಿಭಟನೆ ಭಾನುವಾರ ಮೂರನೇ ದಿನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಪ್ರತಿಭಟನಾಕಾರರು ಹೀಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಪ್ರಧಾನ ವ್ಯವಸ್ಥಾಪಕರ ಕಚೇರಿಯ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಾಗಲಕೋಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಉತ್ತರ ಕರ್ನಾಟಕ ಭಾಗದ ರೈಲ್ವೆ ಯೋಜನೆಗಳನ್ನು ಅನುಷ್ಠಾನಗೊಳಿಸು ವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಜೊತೆಗೆ ಉತ್ತರ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆಯನ್ನು ತೋರಿಸು ತ್ತಿದೆ. ಆದ್ದರಿಂದ ಇಲ್ಲಿನ ರೈಲ್ವೆ ಯೋಜನೆ ಗಳು ಸರಿಯಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂದು ಸಮಿತಿಯ ಅಧ್ಯಕ್ಷ ಕುತುಬುದ್ದೀನ್ ಖಾಜಿ ದೂರಿದರು.